ಧಾರವಾಡ ಮಾ.29:ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಷಿಕ ಪರೀಕ್ಷೆ-1 ರ ನಾಲ್ಕನೇಯ ಪರೀಕ್ಷೆಯಾದ ಇಂದು ಸಮಾಜ ವಿಜ್ಞಾನ ಪರೀಕ್ಷೆಯು ಜಿಲ್ಲೆಯಾದ್ಯಂತ ಶಾಂತ ರೀತಿಯಿಂದ ಸುಸೂತ್ರವಾಗಿ ಜರುಗಿತು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಇಂದು ಬೆಳಿಗ್ಗೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು. ವಿದ್ಯಾರ್ಥಿಗಳ ಹಾಜರಾತಿ, ಗೈರು ಮಾಹಿತಿ ಪಡೆದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಧಾರವಾಡ ತಾಲೂಕಿನ ಯರಿಕೊಪ್ಪ, ಕಲಘಟಗಿ ಪಟ್ಟಣದ ಸೇಂಟ್ ಮೇರಿ ಇಂಗ್ಲೀಷ ಮಾಧ್ಯಮ ಶಾಲೆ ಮತ್ತು ಜನತಾ ಪ್ರೌಢಶಾಲೆಗಳಲ್ಲಿ ಸ್ಥಾಪಿಸಿರುವ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳು ಪರೀಕ್ಷೆ ಬರೆಯುವದನ್ನು, ಪರೀಕ್ಷಾ ಕೇಂದ್ರದ ಮೂಲಸೌಕರ್ಯ, ಸಿಸಿ ಟಿವಿ ಅಳವಡಿಕೆ ಬಗ್ಗೆ ಮಾಹಿತಿ ಪಡೆದುಕೊಂಡರು.
ಪ್ರತಿ ಪರೀಕ್ಷೆ ನಿರ್ಧಿಷ್ಟ ಸಂಖ್ಯೆಯ ಕೆಲವು ವಿದ್ಯಾರ್ಥಿಗಳು ಗೈರಾಗುತ್ತಿದ್ದಾರೆ. ಆಯಾ ಶಾಲೆಯ ಶಿಕ್ಷಕರು ಮತ್ತು ಮುಖ್ಯೋಪಾಧ್ಯಯರು ಪರೀಕ್ಷೆಗೆ ಗೈರುಹಾಜರಾಗಿರುವ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ವಾಸ್ತವಿಕ ಕಾರಣ ತಿಳಿದು ತಮಗೆ ವರದಿ ನೀಡಬೇಕೆಂದು ಕಲಘಟಗಿ ಬಿಇಓ ಅವರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ವಿದ್ಯಾರ್ಥಿನಿ ಅಸ್ವಸ್ಥ; ತಾಲೂಕು ಆಸ್ಪತ್ರೆಗೆ ಡಿಸಿ ಭೇಟಿ: ಕಲಘಟಗಿ ತಾಲೂಕಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳ ಭೇಟಿಯಲ್ಲಿದ್ದಾಗ ಕಲಘಟಗಿ ಪಟ್ಟಣದ ಜನತಾ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ಸ್ಪಂದನಾ ಬೋಸ್ಲೆ ಎಂಬ ವಿದ್ಯಾರ್ಥಿನಿ ಎದೆ ನೋವಿನಿಂದ ಅಸ್ವಸ್ಥಳಾಗಿದ್ದಳು.
ಸುದ್ದಿ ತಿಳಿದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು, ತಕ್ಷಣ ವಿದ್ಯಾರ್ಥಿ ಆರೋಗ್ಯ ಸ್ಥಿತಿ ನೋಡಿಕೊಂಡು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಲು ಬಿಇಓ ಮತ್ತು ಕೇಂದ್ರದ ಮುಖ್ಯ ಪರೀಕ್ಷಕರಿಗೆ ನಿರ್ದೇಶಿಸಿದರು.
ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆ ಪ್ರಾಥಮಿಕ ಚಿಕಿತ್ಸೆ ನೀಡಿದರು. ವಿದ್ಯಾರ್ಥಿನಿ ಅತಿಯಾದ ಬೆವರು ಹಾಗೂ ನಿತ್ರಾಣವಾಗಿದ್ದರಿಂದ ಕಲಘಟಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಇಸಿಜಿ ಮಾಡಿಸಿದರು.
ತಕ್ಷಣ ಅಗತ್ಯ ಚಿಕಿತ್ಸೆ, ಔಷಧಿ ಸಿಕ್ಕಿದ್ದರಿಂದ ವಿದ್ಯಾರ್ಥಿನಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಜಿಲ್ಲಾಧಿಕಾರಿಗಳು ಆಸ್ಪತ್ರೆಗೆ ಸ್ವತಃ ಭೇಟಿ ನೀಡಿ, ಅಗತ್ಯವಾದ ಉತ್ತಮ ಚಿಕಿತ್ಸೆ, ಔಷಧಿ ನೀಡಿ, ಆರೈಕೆ ಮಾಡುವಂತೆ ಮುಖ್ಯ ವೈದ್ಯಾಧಿಕಾರಿ ಡಾ.ಯಶವಂತ ಮದೀನಕರ ಅವರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. ವಿದ್ಯಾರ್ಥಿನಿಗೆ ಪರೀಕ್ಷೆ ಬಗ್ಗೆ ವಿಚಾರಿಸಿ, ಧೈರ್ಯ ಹೇಳಿದರು. ಅವರ ಮನೆಯಲ್ಲಿ ಆರ್ಥಿಕ, ಕೌಟಂಬಿಕ ಸಮಸ್ಯೆ ಇರುವುದನ್ನು ತಿಳಿದು, ಬಯಸಿದಲ್ಲಿ ವಿದ್ಯಾರ್ಥಿನಿಗೆ ವಿದ್ಯಾರ್ಥಿನಿಲಯ ಕಲ್ಪಿಸುವುದಾಗಿ ಭರವಸೆ ನೀಡಿದರು. ವಿದ್ಯಾರ್ಥಿನಿ ಅಜ್ಜಿ ಬಸವಣ್ಣವ್ವ ಬೊಸ್ಲೆ ಜೊತೆಗೆ ಇದ್ದರು.
ತಾಲೂಕು ಆಸ್ಪತ್ರೆ ಸಿಎಂಓ ಡಾ.ಯಶವಂತ ಮದೀನಕರ ಹಾಗೂ ಪಿಜಿಶಿಯನ್ ಡಾ. ನಿರ್ಮಲಾ ಪುಡಲಕಟ್ಟಿ ಅವರು ವಿದ್ಯಾರ್ಥಿನಿಗೆ ಚಿಕಿತ್ಸೆ ನೀಡುತ್ತಿದ್ದಾರೆ.
ಈ ಸಂದರ್ಭದಲ್ಲಿ ಕಲಘಟಗಿ ಪ್ರಭಾರ ತಹಶಿಲ್ದಾರ ಬಸವರಾಜ ಬೆಣ್ಣಿಶಿರೂರ, ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವಿ ಬಸಾಪುರ ಹಾಗೂ ಶಿಕ್ಷಣಾಧಿಕಾರಿ ರೇಖಾ ಭಜಂತ್ರಿ ಸೇರಿದಂತೆ ಇತರರು ಇದ್ದರು.
ಕಲಘಟಗಿ ತಾಲೂಕಿನಲ್ಲಿ ಒಟ್ಟು ಒಂಬತ್ತು ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಗಳಿದ್ದು, ಇಂದಿನ ಸಮಾಜ ವಿಜ್ಞಾನ ಪರೀಕ್ಷೆಗೆ ಒಟ್ಟು 2,554 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 1,206 ಗಂಡು ಮಕ್ಕಳು ಹಾಗೂ 1,303 ಹೆಣ್ಣುಮಕ್ಕಳು ಸೇರಿದ್ದಾರೆ. ಮತ್ತು 45 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.
ಇಂದಿನ ಸಮಾಜ ವಿಜ್ಞಾನ ವಿಷಯ ಪರೀಕ್ಷೆ ಹಾಜರಾತಿ: ಇಂದು ನಡೆದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ-1 ರ ಸಮಾಜ ವಿಜ್ಞಾನ ವಿಷಯದಲ್ಲಿ ಹುಬ್ಬಳ್ಳಿ ಶಹರದ 8,697 ವಿದ್ಯಾರ್ಥಿಗಳು ನೊಂದಣಿ ಮಾಡಿದ್ದು, 8,501 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 196 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಧಾರವಾಡ ಶಹರದಲ್ಲಿ 5,353 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿದ್ದು, 5,250 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 103 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಧಾರವಾಡ ಗ್ರಾಮೀಣದಲ್ಲಿ 3,829 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿದ್ದು, 3,798 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 31 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಹುಬ್ಬಳ್ಳಿ ಗ್ರಾಮೀಣದಲ್ಲಿ 3,722 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿದ್ದು, 3,685 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 37 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕಲಘಟಗಿ ತಾಲೂಕಿನಲ್ಲಿ 2,554 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿದ್ದು, 2,509 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 45 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕುಂದಗೋಳ ತಾಲೂಕಿನಲ್ಲಿ 1,962 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿದ್ದು, 1,934 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 28 ವಿದ್ಯಾರ್ಥಿಗಳು ಗೈರಾಗಿದ್ದಾರೆ. ನವಲಗುಂದ ತಾಲೂಕಿನಲ್ಲಿ 2,500 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿದ್ದು, 2,464 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 36 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಒಟ್ಟು 28,617 ವಿದ್ಯಾರ್ಥಿಗಳು ಸಮಾಜ ವಿಜ್ಞಾನ ವಿಷಯ ಪರೀಕ್ಷೆಗೆ ನೋಂದಣಿ ಮಾಡಿದ್ದು ಈ ಪೈಕಿ 28,141 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 476 ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.