ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಗುಣ್ಣಮಟ್ಟದ ಉಂಡೆ ಕೊಬ್ಬರಿ ಖರೀದಿಗಾಗಿ ಜನವರಿ 20 ರಿಂದ ಜಿಲ್ಲೆಯ ಚಿಕ್ಕಮಗಳೂರು, ಕಡೂರು, ತರೀಕೆರೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆದು ಕೊಬ್ಬರಿ ಖರೀದಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಸೂಚಿಸಿದರು.

WhatsApp Group Join Now

ಚಿಕ್ಕಮಂಗಳೂರು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಖರೀದಿ ಕೇಂದ್ರಗಳಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದವಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಪ್ರತಿ ದಿನ ಅಧಿಕಾರಿಗಳು ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕೆಂದು ತಿಳಿಸಿದ ಅವರು ಖರೀದಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಿಗಾವಹಿಸಬೇಕೆಂದು ತಿಳಿಸಿದರು.
ಸರ್ಕಾರದ ನಿರ್ದೇಶನದನ್ವಯ ಪ್ರತಿ ಕ್ವಿಂಟಾಲ್ ಗುಣಮಟ್ಟದ ಉಂಡೆ ಕೊಬ್ಬರಿಗೆ ರೂ. 12,೦೦೦ಗಳನ್ನು ನಿಗಧಿಪಡಿಸಲಾಗಿದೆ. ಕೊಬ್ಬರಿ ಖರೀದಿಸಲು ಕೇಂದ್ರ ಸರ್ಕಾರದ ಖರೀದಿ ಸಂಸ್ಥೆಯನ್ನಾಗಿ ನಫೆಡ್ ಹಾಗೂ ರಾಜ್ಯ ಸರ್ಕಾರದ ಖರೀದಿ ಸಂಸ್ಥೆಯನ್ನಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳವನ್ನು ನೇಮಿಸಲಾಗಿದೆ. ಖರೀದಿ ಸಂಸ್ಥೆಗಳು ಖರೀದಿ ಪ್ರಕ್ರಿಯೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಜನವರಿ 20 ರಿಂದ ಅನ್ವಯವಾಗುವಂತೆ 45 ದಿನಗಳವರೆಗೆ ರೈತರ ನೋಂದಣಿ ಕಾರ್ಯವನ್ನು ಬಯೋಮೆಟ್ರಿಕ್ ಮೂಲಕ ಮಾಡಬೇಕು.
ಸಂಸ್ಥೆಗಳು ಕೊಬ್ಬರಿ ಖರೀದಿ ಪ್ರಕ್ರಿಯೆಯಲ್ಲಿ ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ ನಫೆಡ್ ಮಾರ್ಗಸೂಚಿಯನ್ನು ಅನುಸರಿಸಬೇಕು. ಖರೀದಿಸಿದ ಕೊಬ್ಬರಿಯನ್ನು ತಾಂತ್ರಿಕ ಮತ್ತು ವೈಜ್ಞಾನಿಕ ಸೌಲಭ್ಯದಿಂದ ಕೂಡಿರುವ ಗೋದಾಮುಗಳಲ್ಲಿ ದಾಸ್ತಾನು ಮಾಡಬೇಕು. ಕೊಬ್ಬರಿ ಖರೀದಿಸುವಾಗ ಪ್ರತಿ ಎಕರೆಗೆ ಗರಿಷ್ಠ 9 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಮಾತ್ರ ಖರೀದಿಸಬೇಕೆಂದು ಹೇಳಿದರು.
ರೈತರ ಹೆಸರಿನಲ್ಲಿ ವರ್ತಕರು ತರುವ ಕೊಬ್ಬರಿಯನ್ನು ಖರೀದಿಸದಂತೆ ಹಾಗೂ ಖರೀದಿಯಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು ಎಂದ ಅವರು ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು.
ಫ್ರೂಟ್ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡಿರುವ ರೈತರು ತಮ್ಮ ಮೊಬೈಲ್ ಸಂಖ್ಯೆ, ಆಧಾರ್ ಸಂಖ್ಯೆ ಸರಿಯಿರುವ ಬಗ್ಗೆ ಪರಿಶೀಲಿಸಿಕೊಳ್ಳಬೇಕು. ರೈತರ ಆಧಾರ್ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಉತ್ಪನ್ನದ ಮೌಲ್ಯವನ್ನು ಡಿಬಿಟಿ ಮೂಲಕ ಜಮೆಯಾಗುವಂತೆ ಪಾವತಿ ಮಾಡಬೇಕು ಎಂದರು.
ಸಭೆಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಮಂಡಳಿ ಉಪನಿರ್ದೇಶಕ ಶ್ರೀಹರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಸಂಜಯ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಜಾತ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಪೂರ್ಣಿಮ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ಜಿಲ್ಲಾ ವ್ಯವಸ್ಥಾಪಕ ಉದಯ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು

About The Author