
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆಯ ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಾಗರಿಕರಿಗೆ ಉತ್ತಮ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಡಳಿತ ಸುಧಾರಣೆ ಪ್ರಕ್ರಿಯೆಯು ನಿರಂತರವಾಗಿರಬೇಕು. ತಾಂತ್ರಿಕ ಯುಗದಲ್ಲಿ ಪ್ರತಿಕ್ಷಣವೂ ಅಮೂಲ್ಯವಾಗಿದ್ದು, ಸಾರ್ವಜನಿಕರಿಗೆ ಪಾರದರ್ಶಕ ಹಾಗೂ ನ್ಯಾಯಬದ್ಧವಾದ ಆಡಳಿತ ದೊರಕಬೇಕು.
ಈ ನಿಟ್ಟಿನಲ್ಲಿ ಸರಕಾರ ಹೆಜ್ಜೆ ಹಾಕುತ್ತಿದೆ.
ಸಾರ್ವಜನಿಕರ ಕೆಲಸಗಳನ್ನು ನಿಯಮಾನುಸಾರ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಮಾತನಾಡಿ ಕಂದಾಯ ಇಲಾಖೆಯಲ್ಲಿ ಅಗತ್ಯವಿರುವ ಆಡಳಿತ ಸುಧಾರಣೆಗಳ ಕುರಿತು ಗ್ರಾಮ ಪಂಚಾಯಿತಿ ಕಟ್ಟಡಗಳನ್ನೇ ಗ್ರಾಮಸೌಧ ಎಂದು ಪರಿವರ್ತಿಸಿ ಪಂಚಾಯತಿ ವ್ಯಾಪ್ತಿಯ ಮೂರ್ನಾಲ್ಕು ಗ್ರಾಮಗಳ ಜನರಿಗೆ ಪ್ರತಿಯೊಂದು ಸೇವೆಯು ಗ್ರಾಮಸೌಧದಲ್ಲೇ ದೊರಕುವಂತೆ ಕ್ರಮ ಕೈಗೊಳ್ಳಬೇಕಿದೆ. ಗ್ರಾಮ ಪಂಚಾಯತಿಯ ಪಿಡಿಓ ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಕಡ್ಡಾಯವಾಗಿ ಗ್ರಾಮಸೌಧದಲ್ಲೇ ಕುಳಿತು ಸಾರ್ವಜನಿಕರ ಕೆಲಸ ಮಾಡಿಕೊಡಲು ಅನುಕೂಲ ಕಲ್ಪಿಸಬಹುದು ಎಂದು ಸಲಹೆ ನೀಡಿದರು.
ಗ್ರಾಮ ಲೆಕ್ಕಾಧಿಕಾರಿಗಳಿಂದ ಹಿಡಿದು ಜಿಲ್ಲಾಧಿಕಾರಿ ಹಂತದವರೆಗೆ ಸಿಯುಜಿ ಮೊಬೈಲ್ ಸಂಖ್ಯೆ ನೀಡುವುದರಿಂದ ನಾಗರಿಕರಿಗೆ ಅನುಕೂಲವಾಗಲಿದೆ.
ನಾಲ್ಕು ತಾಲ್ಲೂಕುಗಳು ಹೊಸದಾಗಿ ರಚಿಸಲಾಗಿದೆ. ರೆಕಾರ್ಡ್ ರೂಮ್ ಇಲ್ಲದಿರುವುದರಿಂದ ಕಂದಾಯ ಇಲಾಖೆಯ ಪ್ರಮುಖ ದಾಖಲೆಗಳ ಸಂರಕ್ಷಣೆಗೆ ತೊಂದರೆಯಾಗುತ್ತಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.
ರಸ್ತೆ ಮತ್ತಿತರ ಅಭಿವೃದ್ಧಿ ಕಾಮಗಾರಿಗಳಿಗೆ ಅರಣ್ಯ ಇಲಾಖೆಯ ವತಿಯಿಂದ ನಿರಾಕ್ಷೇಪಣೆ ಪ್ರಮಾಣಪತ್ರ ಕಾಲಮಿತಿಯಲ್ಲಿ ಒದಗಿಸಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಅನೇಕ ಕಾಮಗಾರಿಗಳು ಮತ್ತು ಯೋಜನೆಗಳು ನೆನೆಗುದಿಗೆ ಬಿದ್ದಿದ್ದು, ಕೆಲ ಯೋಜನೆಗಳು ರದ್ದಾಗಿರುತ್ತವೆ. ಆದ್ದರಿಂದ ಸಣ್ಣಪುಟ್ಟ ಕಾಮಗಾರಿಗಳಿಗೆ ರಾಜ್ಯಮಟ್ಟದಲ್ಲಿ ತ್ವರಿತ ಅನುಮತಿ ನೀಡಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಲಹೆ ನೀಡಿದರು.
ಪೊಲೀಸ್ ಇಲಾಖೆಯಲ್ಲಿ ಇಬ್ಬರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇಮಿಸಲಾಗಿದೆ. ಅದೇ ಮಾದರಿಯಲ್ಲಿ ಬೆಳಗಾವಿಯಂತಹ ದೊಡ್ಡ ಜಿಲ್ಲೆಗಳಿಗೆ ಇಬ್ಬರು ಅಪರ ಜಿಲ್ಲಾಧಿಕಾರಿಗಳನ್ನು ನೇಮಿಸುವುದರಿಂದ ಆಡಳಿತದಲ್ಲಿ ಇನ್ನಷ್ಟು ಸುಧಾರಣೆ ಸಾಧ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಲಹೆ ನೀಡಿದರು.
ಎಲ್ಲ ಇಲಾಖೆಗಳಲ್ಲಿ ಕ್ಯೂಆರ್ ಕೋಡ್ ಮೂಲಕ ಡಿಜಿಟಲ್ ಪಾವತಿಗೆ ವ್ಯವಸ್ಥೆ ಕಲ್ಪಿಸುವುದರಿಂದ ಸಮಯ ಉಳಿತಾಯವಾಗಲಿದೆ.
ಸಿಂಧುತ್ವ ಅರ್ಜಿ ವಿಲೇವಾರಿಗೆ ಸಂಬಂಧಿಸಿದಂತೆ ಪ್ರತಿಯೊಂದು ಅರ್ಜಿಯು ಜಿಲ್ಲಾಧಿಕಾರಿ ಲಾಗಿನ್ ನಲ್ಲಿ ಪೆಂಡಿಂಗ್ ತೋರಿಸುತ್ತದೆ. ಆದ್ದರಿಂದ ಆಯಾ ಹಂತದ ಅಧಿಕಾರಿಗಳ ಬಳಿ ಪೆಂಡಿಂಗ್ ಇರುವ ಬಗ್ಗೆ ತೋರಿಸುವಂತಾಗಬೇಕು.
ಸಾರ್ವಜನಿಕರು ಪೊಲೀಸ್ ಠಾಣೆಗೆ ಖುದ್ದಾಗಿ ಹೋಗಿ ದೂರು ನೀಡುವ ವ್ಯವಸ್ಥೆಯಿದೆ.ಕೆಲವು ಠಾಣೆಗಳಲ್ಲಿ ದೂರು ಸ್ವೀಕರಿಸಲು ನಿರಾಕರೇ ಅಥವಾ ವಿಳಂಬ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬರುತ್ತಿವೆ. ಆದ್ದರಿಂದ ಆನ್ ಲೈನ್ ಮೂಲಕ ದೂರು ನೀಡುವ ವ್ಯವಸ್ಥೆ ಜಾರಿಗೊಳಿಸುವುದು ಸೂಕ್ತ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮಾತನಾಡಿ
ಗ್ರಾಮ ಪಂಚಾಯತಿ ಮಟ್ಟದಲ್ಲಿ ನಡೆಯುವ ಅಕ್ರಮಗಳ ಪರಿಶೀಲನೆಗೆ ನರೇಗಾ ಓಂಬುಡ್ಸಮನ್ ಮಾದರಿಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಪ್ರತ್ಯೇಕ ವಿಚಕ್ಷಣಾ ವ್ಯವಸ್ಥೆ ಸ್ಥಾಪಿಸುವ ಅಗತ್ಯವಿದೆ ಎಂದು ಸಲಹೆ ನೀಡಿದರು.
ಗಾಯರಾಣಾ ಜಮೀನಿನಲ್ಲಿರುವ ಮನೆಗಳ ಮಾಲೀಕತ್ವದ ಸಮಸ್ಯೆಯನ್ನು ಒಂದು ಬಾರಿ ಪರಿಹರಿಸುವ ಮೂಲಕ ಗ್ರಾಮ ಪಂಚಾಯತಿ ಮಟ್ಟದ ಅನೇಕ ಗೊಂದಲಗಳಿಗೆ ತೆರೆ ಎಳೆಯಬಹುದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಮಾತನಾಡಿದ ಅವರು ಬೆಳಗಾವಿ ಜಿಲ್ಲೆಯಲ್ಲಿ ನಾಗರಿಕರು ಮತ್ತು ಪೊಲೀಸರ ನಡುವಿನ ಅನುಪಾತವು ತೀರ ಕಡಿಮೆಯಾಗಿದೆ. ಪ್ರತಿ ಲಕ್ಷ ಜನರಿಗೆ ಕೇವಲ 52 ಜನ ಪೊಲೀಸರಿದ್ದಾರೆ ಇದರಿಂದ ನಿರ್ವಹಣೆ ಕಷ್ಟದಾಯಕವಾಗಿದೆ. ಆದ್ದರಿಂದ ಕನಿಷ್ಠ ಸರಕಾರ ನಿಗದಿಪಡಿಸಿದ ಅನುಪಾತದಂತೆ ಸಿಬ್ಬಂದಿ ನೇಮಿಸುವುದು ಸೂಕ್ತ ಎಂದು ಸಲಹೆ ನೀಡಿದರು.
ಪೊಲೀಸ್ ಸಿಬ್ಬಂದಿಗೆ ಅನುಕೂಲವಾಗುವಂತೆ ವಸತಿಗೃಹ ಸೌಲಭ್ಯವನ್ನು ಹೆಚ್ಚಿಸಬೇಕು; ವಸತಿಗೃಹ ದುರಸ್ತಿಗೆ ಪ್ರತಿವರ್ಷ ಅನುದಾನ ಬಿಡುಗಡೆ ಮಾಡಬೇಕು; ವಿತ್ತೀಯ ಅಧಿಕಾರವನ್ನು ವಿಕೇಂದ್ರೀಕರಣಗೊಳಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
ಹಾರನಹಳ್ಳಿ ರಾಮಸ್ವಾಮಿ ಆಯೋಗ ನೀಡಿರುವ ವರದಿಯಲ್ಲಿರುವ 256 ಅಂಶಗಳನ್ನು ಜಾರಿಗೆ ತರಲಾಗಿದೆ.
ಅದೇ ರೀತಿ ನಿವೃತ್ತ ಅಧಿಕಾರಿ ವಿಜಯಭಾಸ್ಕರ್ ಅವರ ಅಧ್ಯಕ್ಷತೆಯ ಸುಧಾರಣಾ ಆಯೋಗವು 7 ವರದಿ ನೀಡಿದ್ದು, ಅವುಗಳನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆಡಳಿತ ಸುಧಾರಣಾ ಆಯೋಗದ ಅಧಿಕಾರಿ ಪ್ರಸನ್ನ ಕುಮಾರ್ ಅವರು ತಿಳಿಸಿದರು.
ಸರಕಾರಿ ಸೌಲಭ್ಯವನ್ನು ಸುಲಭವಾಗಿ ಒದಗಿಸಲು ಅರ್ಜಿ ನಮೂನೆಗಳನ್ನು ಸರಳೀಕರಣಗೊಳಿಸಬೇಕಿದೆ.
ಅತಿಯಾದ ದಾಖಲೆಗಳನ್ನು ಕೇಳಿದಾಗ ಅವುಗಳನ್ನು ಹೊಂದಿಸಲು ಸಾರ್ವಜನಿಕರು ಪರದಾಡಬೇಕಾಗುತ್ತದೆ. ಆದ್ದರಿಂದ ಆದಷ್ಟು ಕಡಿಮೆ ದಾಖಲೆಗಳನ್ನು ಕೇಳುವಂತಾಗಬೇಕು.
ತಂತ್ರಜ್ಞಾನ ಬಳಕೆಯಿಂದ ಆಡಳಿತ ಸುಧಾರಣೆ ಸಾಧ್ಯವಾಗಿದ್ದು, ಇ-ಆಫೀಸ್ ವ್ಯವಸ್ಥೆಯನ್ನು ಕೆಳಹಂತದವರೆಗೆ ವಿಸ್ತರಿಸಬೇಕು ಎಂದು ಪ್ರಸನ್ನ ಕುಮಾರ್ ತಿಳಿಸಿದರು.
ಹಿರಿಯ ನಾಗರಿಕರ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಹಾಗೂ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳ ಆದೇಶಗಳನ್ನು ಜಾರಿಗೊಳಿಸಲು ಸಿವಿಲ್ ನ್ಯಾಯಾಲಯಗಳ ಮಾದರಿಯಲ್ಲಿ ಬೇಲಿಫ್ ಗಳನ್ನು ನೇಮಿಸಬೇಕು ಎಂದು ಹಿರಿಯ ನಾಗರಿಕರು ಸಲಹೆ ನೀಡಿದರು.
ಕೆಲವು ಇಲಾಖೆಗಳಲ್ಲಿ ನಿವೃತ್ತ ನೌಕರರಿಗೆ ಆರು ತಿಂಗಳಾದರೂ ಪಿಂಚಣಿ ಮತ್ತಿತರ ಸೌಲಭ್ಯಗಳು ದೊರಕುತ್ತಿಲ್ಲ; ಇದರಿಂದ ಅನೇಕ ಕುಟುಂಬಗಳು ಸಂಕಷ್ಟಕೀಡಾಗಿವೆ. ಆದ್ದರಿಂದ ನಿವೃತ್ತಿ ಮುಂಚೆಯೇ ಪಿಂಚಣಿ ದಾಖಲೆಗಳನ್ನು ಸಲ್ಲಿಸಿ ಸಕಾಲದಲ್ಲಿ ಪಿಂಚಣಿ ದೊರಕಿಸುವ ನಿಯಮ ಜಾರಿಗೆ ತರಬೇಕು ಎಂದು ಸಲಹೆ ನೀಡಿದರು.
ವಿವಿಧ ವಸತಿ ಯೋಜನೆಯಡಿ ನೀಡಲಾಗುವ ವಸತಿ ಸೌಲಭ್ಯವನ್ನು ಪಡೆಯಲು ಕಡ್ಡಾಯವಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ಸಾರ್ವಜನಿಕರು ಸಲಹೆ ನೀಡಿದರು.
ಈ ವೇಳೆ ಕಿತ್ತೂರು ಶಾಸಕರಾದ ಬಾಬಾಸಾಹೇಬ್ ಪಾಟೀಲ, ಮೇಯರ್ ಸವಿತಾ ಕಾಂಬಳೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಸಂಜಯ ಶೆಟ್ಟೆಣ್ಣವರ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಉಪಸ್ಥಿತರಿದ್ದರು.


