ಕೋಲಾರ: ಖಾಸಗಿ ಕ್ಷೇತ್ರದ ಕಂಪನಿಗಳು, ಕಾರ್ಖಾನೆಗಳು, ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿರುವುದು ಏಳು ಕೋಟಿ ಕನ್ನಡಿಗರ ಗೆಲುವಾಗಿದೆ ಎಂದು ಕನ್ನಡ ಸೇನೆ ಜಿಲ್ಲಾಧ್ಯಕ್ಷ ಕನ್ನಡಮಿತ್ರ ವೆಂಕಟಪ್ಪ ಹೇಳಿದ್ದಾರೆ.
ಈ ಕುರಿತು ಪತ್ರಿಕೆ ಹೇಳಿಕೆ ನೀಡಿರುವ ಅವರು ‘ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರ ಉದ್ಯಮ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡುವ ಕರ್ನಾಟಕ ರಾಜ್ಯ ಉದ್ಯೋಗ ಮಸೂದೆ 2024 ಗುರುವಾರ ವಿಧಾನಸಭೆಯಲ್ಲಿ ಮಂಡನೆಯಾಗಲಿದೆ. ಮಸೂದೆ ಜಾರಿ ಮಾಡಲು ಮುಂದಾಗಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಏಳು ಕೋಟಿ ಕನ್ನಡಿಗರ ಪರವಾಗಿ ಅಭಿನಂದನೆಗಳನ್ನು ತಿಳಿಸುವುದಾಗಿ ಹೇಳಿದರು.
ಸ್ಥಳೀಯರಿಗೆ ಉದ್ಯೋಗ ಡಾ. ಸರೋಜಿನಿ ಮಹಿಷಿ ವರ್ದಿ ಮೀಸಲಾತಿ ಮಸೂದೆ ಜಾರಿ ಏಳು ಕೋಟಿ ಕನ್ನಡಿಗರು ಹಾಗೂ ಕನ್ನಡ ಪರ ಸಂಘಟನೆಗಳ ಸುದೀರ್ಘ ಹೋರಾಟಕ್ಕೆ ಸಿಕ್ಕಿರುವ ಬಹುದೊಡ್ಡ ಗೆಲುವು. ಇದರಿಂದಾಗಿ ಕನ್ನಡಿಗರಿಗೆ ನ್ಯಾಯ ಸಿಕ್ಕಂತಾಗಿದೆ. ರಾಜ್ಯದ ಭೂಮಿ, ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಬಳಸಿಕೊಂಡು ಕಾರ್ಯನಿರ್ವಹಿಸುತ್ತಿರುವ ಖಾಸಗಿ ವಲಯದ ಕಂಪನಿಗಳು ಸ್ಥಳೀಯರಿಗೆ ಉದ್ಯೋಗ ನೀಡುವಲ್ಲಿ ತಾರತಮ್ಯ ಮಾಡುತ್ತಿದ್ದವು, ಇದೀಗ ಸಿ ಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಚಿವ ಸಂಪುಟದಲ್ಲಿ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆ ಜಾರಿ ಮಾಡುವ ತೀರ್ಮಾನವನ್ನು ತೆಗೆದುಕೊಂಡಿರುವುದು ಖುಷಿಯ ವಿಚಾರವಾಗಿದೆ.
ವಿಧಾನಸಭೆ ಅಧಿವೇಶನದಲ್ಲಿ ಮಂಡನೆ ಮಾಡಿ ಅನುಮೋದನೆ ಪಡೆದುಕೊಂಡ ಮಸೂದೆಯನ್ನು ಯಥಾವತ್ತಾಗಿ ಜಾರಿ ಮಾಡಬೇಕೆಂದು ಸರ್ಕಾರಕ್ಕೆ ಅವರು ಮನವಿ ಮಾಡಿದರು. ಖಾಸಗಿ ವಲಯದ ಕಂಪನಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ಗ್ರೂಪ್ ಉದ್ಯೋಗದಲ್ಲಿ ಶೇಕಡ 100 ರಷ್ಟು ಮೀಸಲಾತಿ ಕಲ್ಪಿಸಿಕೊಡಲಾಗಿದೆ. ಇದರಿಂದ ಸ್ಥಳೀಯರಿಗೆ ಉದ್ಯೋಗ ಅವಕಾಶ ಹೆಚ್ಚು ಸಿಗುತ್ತದೆ.
ಇನ್ನೂ ಖಾಸಗಿ ವಲಯದ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಯನ್ನು ವಿರೋಧಿಸುತ್ತಿರುವ ಉದ್ಯಮಿಗಳು ಕನ್ನಡ ವಿರೋಧಿ ನೀತಿಯನ್ನು ಕೈಬಿಡಬೇಕು. ರಾಜ್ಯದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿರುವ ಕೈಗಾರಿಕೆಗಳ ಉದ್ಯೋಗಗಳು ಉತ್ತರ ಭಾರತದ ರಾಜ್ಯಗಳು ಪಾಲುಗುತ್ತಿವೆ.
ಪ್ರತಿಷ್ಠಿತ ಕಂಪನಿಗಳ ಸಂಸ್ಥೆಗಳಲ್ಲಿನ ಉದ್ಯೋಗಗಳು ನೆರೆಯ ಅಂಧ್ರ, ತಮಿಳುನಾಡು, ಕೇರಳ ರಾಜ್ಯಗಳ ಪಾಲುಗುತ್ತಿವೆ, ನಮ್ಮ ರಾಜ್ಯದ ಭೂಮಿ, ನೀರು , ವಿದ್ಯುತ್ ಪಡೆದು ಕನ್ನಡಿಗರಿಗೆ ಮಾತ್ರ ಉದ್ಯೋಗ ಬೇಡ ಎಂದು ಹೇಳುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಸರ್ಕಾರದ ಮಸೂದೆಯನ್ನು ಖಾಸಗಿ ವಲಯದ ಕಾರ್ಖಾನೆ, ಸಂಸ್ಥೆಗಳು ಯಥಾವತ್ತಾಗಿ ಜಾರಿ ಮಾಡಬೇಕು, ಒಂದು ವೇಳೆ ಮಸೂದೆಗೆ ವಿರೋಧಿಸಲು ಮುಂದಾದರೆ ಕನ್ನಡ ಪರ ಸಂಘಟನೆಗಳಿಂದ ಮಸೂದೆ ವಿರೋಧಿಸುವ ಕಂಪನಿಗಳು ಹಾಗೂ ಸಂಸ್ಥೆಗಳ ಮುಂದೆ ಬೃಹತ್ ಪ್ರತಿಭಟನೆ ಹೋರಾಟ ನಡೆಸಬೇಕಾಗುತ್ತದೆ ಕನ್ನಡಮಿತ್ರ ವೆಂಕಟಪ್ಪ ಎಚ್ಚರಿಸಿದ್ದಾರೆ



