ಬೆನಕನಹಳ್ಳಿ ಡೊಂಬರ ಕಾಲನಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಭೇಟಿ

WhatsApp Group Join Now

ಬೆಳಗಾವಿ ಹಿಂಡಲಗಾ ರಸ್ತೆಯಲ್ಲಿರುವ ಬೆನಕನಹಳ್ಳಿ ಗ್ರಾಮ ಪಂಚಾಯತಿಯ ವ್ಯಾಪ್ತಿಗೆ ಒಳಪಡುವ ಡೊಂಬರ ಕಾಲೋನಿಗೆ ಮಂಗಳವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು, ಅಲ್ಲಿನ ಅವ್ಯವಸ್ಥೆಯ ಕುರಿತು ಅಸಮಾಧಾನ‌ ವ್ಯಕ್ತಪಡಿಸಿದರು.

ಮೂಲಭೂತ ಸೌಕರ್ಯಗಳಿಂದ ವಂಚಿತಗೊಂಡಿರುವ ಕುರಿತು ಆಕ್ರೋಶ ವ್ಯಕ್ತಪಡಿಸಿದರು ಡೊಂಬರ ಕಾಲನಿಯ ಜನರಿಗೆ ಕೂಡಲೇ ಸೌಕರ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ದಿನನಿತ್ಯ ಕುಡಿಯುವ ನೀರಿನ ವ್ಯವಸ್ಥೆ ಸರಿಪಡಿಸಬೇಕು; ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಕನ್ನಡ ಮಾಧ್ಯಮ ಶಾಲೆಯನ್ನು ತೆರೆಯಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಪಿಯುಸಿ ಮುಗಿಸಿದ ನಂತರ ಅಧ್ಯಯನ ಮುಂದುವರಿಸಿದವರು ಮತ್ತು ಪಿಯುಸಿ ವಿದ್ಯಾಭ್ಯಾಸವನ್ನು ಅರ್ಧಕ್ಕೆ ಬಿಟ್ಟ ಮಕ್ಕಳ ಪಟ್ಟಿಯನ್ನು ನೀಡಲು ಸೂಚಿಸಿದರು.

ಅಲ್ಲದೆ ಆರೋಗ್ಯ ಇಲಾಖೆಯಿಂದ ನಿಯಮಿತವಾಗಿ ಡೊಂಬರ ಕಾಲನಿಯಲ್ಲಿ ಆರೋಗ್ಯ ತಪಾಸಣೆ ನಡೆಸಬೇಕು. ಸಾಮಾಜಿಕ ಸೇವಾಭದ್ರತಾ ಯೋಜನೆಗೆ ಸಂಬಂಧಿಸಿದಂತೆ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಸೌಲಭ್ಯಗಳನ್ನು ಒದಗಿಸಬೇಕು.

ಕೆಳಹಂತದ ಅಧಿಕಾರಿಗಳು ಹಾಗೂ ಸಿಬ್ಬಂಸಿ ಜನರ ನಡುವೆ ಇದ್ದು ಕೆಲಸ ನಿರ್ವಹಿಸಬೇಕು. ಅಂದಾಗ ಮಾತ್ರ ಜನರಿಗೆ ಸರಕಾರಿ ಸೌಲಭ್ಯಗಳನ್ನು ಒದಗಿಸುವುದು ಸಾಧ್ಯ. ಆದ್ದರಿಂದ ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಡಾ.ನಾಗಲಕ್ಷ್ಮೀ ಚೌಧರಿ ನಿರ್ದೇಶನ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಾಮನಗೌಡ ಕನ್ನೋಳ್ಳಿ,
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಾಗರಾಜ ಸೇರಿದಂತೆ ಆರೋಗ್ಯ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತಿ ರಾಜ್ ಇಲಾಖೆಯ ವಿವಿಧ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

About The Author