
ಬಳ್ಳಾರಿ ಜಿಲ್ಲಾಡಳಿತ ವತಿಯಿಂದ ನಗರದ ಡಾ.ರಾಜ್ಕುಮಾರ್ ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನ ಆವರಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣವನ್ನು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ನೆರವೇರಿಸಿ ಅವರು ಮಾತನಾಡಿದರು.
ದೇಶ ಸ್ವಾತಂತ್ರ್ಯ ಪಡೆದ ನಂತರವೂ ಹೈದರಾಬಾದ್ ನಿಜಾಮ ಮೀರ್ ಉಸ್ಮಾನ್ ಅಲಿಯ ಆಡಳಿತಕ್ಕೆ ಒಳಪಟ್ಟಿದ್ದ ಕಲ್ಯಾಣ ಕರ್ನಾಟಕ ಪ್ರದೇಶಗಳಲ್ಲಿ ಶಿಕ್ಷಣ, ಉದ್ಯೋಗ, ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳು ತಟಸ್ಥವಾಗಿದ್ದವು ಹಾಗೂ ಕಲ್ಯಾಣ ಕರ್ನಾಟಕ ಘೋಷಣೆಯಾದ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲೆ ಸ್ಥಾನ ವಂಚಿತವಾಗಿತ್ತು. ಇಲ್ಲಿನ ಸ್ಥಳೀಯ ಹೋರಾಟಗಾರರ ಶ್ರಮದಿಂದ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಸೇರ್ಪಡೆಯಾದ ನಂತರ ಹಲವಾರು ಅಭಿವೃದ್ಧಿ ಪ್ರಯೋಜನಗಳನ್ನು ಪಡೆದುಕೊಂಡಿದೆ ಎಂದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿನ ಜನರಿಗೆ ವಿಶೇಷ ಸ್ಥಾನಮಾನ ಕಲ್ಪಿಸುವ ನಿಟ್ಟಿನಲ್ಲಿ ಸಂವಿಧಾನ ತಿದ್ದುಪಡಿ ಕಾಯ್ದೆ 371(ಜೆ) ಜಾರಿಗೊಳಿಸಲಾಗಿದ್ದು, ಇದರಿಂದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಜನರಿಗೆ ಶಿಕ್ಷಣ, ಆರೋಗ್ಯ, ಉದ್ಯೋಗ ಸೇರಿದಂತೆ ವಿವಿಧ ಅಭಿವೃದ್ಧಿ ಕ್ಷೇತ್ರಗಳಲ್ಲಿ ಹೆಚ್ಚಿನ ಸೌಲಭ್ಯ ಒದಗಿಸಲಾಗುತ್ತದೆ ಎಂದು ಹೇಳಿದರು.
ಬಳ್ಳಾರಿ ಜಿಲ್ಲೆಯು ಭವ್ಯ ಇತಿಹಾಸ ಹೊಂದಿದ್ದು, ಕೋಟೆ, ದೇವಾಲಯ, ಚರ್ಚ್, ಮಸೀದಿಗಳಿವೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತ್ಯಂತ ಶಾಂತಿಯುತ ಜಿಲ್ಲೆಯಾಗಿದ್ದು, ಉಕ್ಕಿನ ನಗರ ಎಂದೇ ಪ್ರಸಿದ್ದಿ ಪಡೆದಿದೆ ಹಾಗೂ ಕೈಗಾರೀಕರಣ ಅಭಿವೃದ್ಧಿ ಹೊಂದಿದೆ ಎಂದರು.
ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಪಕ್ಷಪಾತ, ಜಾತಿ, ಬೇಧ-ಭಾವವಿಲ್ಲದೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದ್ದು, ಬಡವರ, ಮಹಿಳೆರ, ಯುವಕರ, ವಿದ್ಯಾರ್ಥಿಗಳ, ರೈತರ ಹಾಗೂ ಜನಸಾಮಾನ್ಯರ ಜೀವನ ಹಸನಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರಿ ಶಾಲೆ, ಮೊರಾರ್ಜಿ ದೇಸಾಯಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ ಶಾಲೆ ಸೇರಿದಂತೆ ವಸತಿ ನಿಲಯಗಳು ಮತ್ತು ಶೈಕ್ಷಣಿಕ ಲೋನ್ಗಳಿಗೆ ಸರ್ಕಾರ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ತಿಳಿಸಿದರು.
ಪೌರಾಡಳಿತ ಇಲಾಖೆ ವತಿಯಿಂದ ಮೊದಲನೆಯದಾಗಿ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು, ಸ್ವಚ್ಚ ನಗರ, ಸ್ವಚ್ಛ ಗ್ರಾಮ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಲಾಗುತ್ತದೆ. ಮತ್ತು ಇಂದಿರಾ ಕ್ಯಾಂಟೀನ್ ಇಂದ ಕೂಲಿ ಕಾರ್ಮಿಕರಿಗೆ, ರೈತರಿಗೆ, ಬಡವರಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿದೆ ಎಂದರು.
ಕಲಬುರಗಿಯಲ್ಲಿ ಮಂಗಳವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಎಲ್ಲಾ ಸಚಿವರೊಡನೆ ಹಾಗೂ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಸಂಪುಟ ಸಭೆ ಏರ್ಪಡಿಸಿದ್ದು, ಕಲ್ಯಾಣ ಕರ್ನಾಟಕ ಭಾಗದ ಪ್ರಗತಿ ಪರಿಶೀಲನಾ ವರದಿ ಹಾಗೂ ಮುಂದಿನ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲಾಗುತ್ತದೆ ಎಂದು ಹೇಳಿದರು.
ಸಂಸದ ಈ.ತುಕಾರಾಂ ಮಾತನಾಡಿ, ಸುಭದ್ರ ಸಂವಿಧಾನದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೆಲ್ಲರೂ ಮುನ್ನಡೆಯುತ್ತಲಿದ್ದು, ಸೆ.15 ರಂದು ಅಂತರಾಷ್ಟಿಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ರಾಜ್ಯಾದ್ಯಂತ ಬೀದರ್ನಿಂದ ಚಾಮರಾಜನಗರದವರೆಗೆ 2500 ಕಿ.ಮಿ ಬೃಹತ್ ಮಾನವ ಸರಪಳಿ ನಿರ್ಮಿಸಿ ಒಮ್ಮತದಿಂದ ಇತಿಹಾಸ ಸೃಷ್ಠಿಸಲಾಗಿದೆ ಎಂದರು.
ಏಕ-ಭಾರತ ಕನಸನ್ನು ಹೊಂದಿದ್ದ ಸರ್ದಾರ ವಲ್ಲಭಾಯ್ ಪಟೇಲ್ರವರ ದಿಟ್ಟ ನಿರ್ಧಾರ ಹಾಗೂ ಚಾಣಾಕ್ಷ ಹೋರಾಟದಿಂದ ನ್ಯಾಯಸಮ್ಮತವಾಗಿ ಸ್ವಾತಂತ್ರ್ಯ ದೊರೆತ್ತಿದ್ದು, ಇತಿಹಾಸ ತಿಳಿದುಕೊಂಡು ಕಾರ್ಯಕ್ರಮ ಆಯೋಜನೆಯ ಉದ್ದೇಶ ನೆರವೇರಿಸಬೇಕು ಎಂದರು.
ಕರ್ನಾಟಕ ಸರ್ಕಾರದ ಹಿಂದಿನ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ರಾಜ್ಯದ ಬೆಂಗಳೂರು ಪ್ರಾಂತ್ಯ, ಮುಂಬೈ ಪ್ರಾಂತ್ಯ ಮತ್ತು ಹೈದರಬಾದ್ ಪ್ರಾಂತ್ಯದಲ್ಲಿನ ತಾರತಮ್ಯ ಹೋಗಲಾಡಿಸಲು 2002ರಲ್ಲಿ ಡಾ.ನಂಜುಂಡಪ್ಪ ಅವರ ನೇತೃತ್ವದ ಡಾ.ನಂಜುಂಡಪ್ಪ ಸಮಿತಿ ರಚಿಸಿ ವರದಿ ತಯಾರಿಸಲು ಸೂಚಿಸಿದ್ದರು. ಅಂದಿನ ದಿನಮಾನಗಳಲ್ಲಿ ಮೂಲಭೂತ ಸೌಕರ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ದಿಯಲ್ಲಿ ಹಿಂದುಳಿದ, ಅತಿ ಹಿಂದುಳಿದ, ಅತ್ಯಂತ ಹಿಂದುಳಿದ ತಾಲ್ಲೂಕುಗಳನ್ನು ಗುರುತಿಸಿ ಸಂಪೂರ್ಣ ಅಭಿವೃದ್ಧಿ ಕರ್ನಾಟಕ ಮಾಡುವ ಪಣತೊಟ್ಟಿದ್ದರು. ಅದರಲ್ಲಿ 175 ತಾಲ್ಲೂಕುಗಳಲ್ಲಿ 114 ತಾಲ್ಲೂಕು ಹಿಂದುಳಿದ ವರದಿಯಾದರೆ, ಕಲ್ಯಾಣ ಕರ್ನಾಟಕ ಭಾಗದ 39 ತಾಲ್ಲೂಕುಗಳಲ್ಲಿ 21 ತಾಲ್ಲೂಕುಗಳು ಅತ್ಯಂತ ಹಿಂದುಳಿದ ತಾಲ್ಲೂಕುಗಳಿವೆ ಎಂದು ವರದಿ ನೀಡಿದ ಬೆನ್ನಲ್ಲೆ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ವಿಶೇಷಂ ಸ್ಥಾನಮಾನ ದೊರಕಿಸಲು ಪ್ರಯತ್ನ ಪಟ್ಟರು ಎಂದು ಮಾಹಿತಿ ನೀಡಿದರು.
ಅಖಂಡ ಬಳ್ಳಾರಿ ಜಿಲ್ಲೆಯ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳು ರೂಪುಗೊಂಡು ಕಾರ್ಯಪ್ರವೃತ್ತವಾಗಿದ್ದು, ಮುಂಬರುವ ದಿನಮಾನಗಳಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಉಜ್ವಲ ಭವಿಷ್ಯ ನಿರ್ಮಿಸೋಣ ಎಂದು ಕರೆ ನೀಡಿದರು.
ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಸಿರಿಗೇರಿ ಪನ್ನರಾಜ್ ಅವರು ಕಾರ್ಯಕ್ರಮ ಕುರಿತು ವಿಶೇಷ ಉಪನ್ಯಾಸ ನೀಡಿ, ಕಲ್ಯಾಣ ಕರ್ನಾಟಕ ವಿಮೋಚನೆಯಲ್ಲಿ ಅಂದಿನ ಗೃಹ ಮಂತ್ರಿ ಉಕ್ಕಿನ ಮನುಷ್ಯ ಸರ್ಧಾರ್ ವಲ್ಲಭಾಯ್ ಪಟೇಲ್ ಅವರು “ಆಪರೇಷಂನ್ ಪೋಲೊ” ಅಥವಾ ಪೊಲೀಸ್ ಆಕ್ಷನ್ ಎನ್ನುವ ಸೇನಾ ಕಾರ್ಯಚರಣೆ ನಡೆಸಿ ಹೈದರಬಾದ್ ನಿಜಾಮನ ದುರಾಡಳಿತದಿಂದ ವಿಮುಕ್ತಿಗೊಳಿಸಲು ಶಕ್ತರಾದರು ಎಂದು ತಿಳಿಸಿದರು.
ಹೈದರಬಾದಿನ ನವಾಬ ಮೀರ್ ಉಸ್ಮಾನ್ ಅಲಿಯು ಖಾಸಿಂ ರಜಿನಿ ನೇತೃತ್ವದಲ್ಲಿ ರಜಾಕಾರರನ್ನು ದಾಳಿಗೆ ಕಳುಹಿಸಿದನು. ರಜಾಕಾರರ ದಾಳಿಯ ವಿರುದ್ಧ ಸ್ವಾಮಿ ರಮಾನಂದ ತೀರ್ಥರು “ಕ್ವಿಟ್ ಕಾಲೇಜು ಆಕ್ಟ್ ನವ್” ಎನ್ನುವ ಘೋಷಂಣೆಯ ಮೂಲಕ ವಿದ್ಯಾರ್ಥಿ ಸಮುದಾಯವನ್ನು ಒಗ್ಗೂಡಿಸಿ ಭಾರತಕ್ಕೆ ಹೈದರಾಬಾದ್ ಪ್ರದೇಶ ಸೇರಿಸುವ ಛಲದಿಂದ ಹೋರಾಟ ನಡೆಸಿದರು ಎಂದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ರಚನೆಯಾದಾಗ ಬಳ್ಳಾರಿ ಜಿಲ್ಲೆಯ ಹೆಸರನ್ನು ಕೈಬಿಡಲಾಗಿತ್ತು. ಆ ಸಂದರ್ಭದಲ್ಲಿ ಹೋರಾಟದ ಬೀಜ ಬಿತ್ತಿ ಜಿಲ್ಲೆಯನ್ನು ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ. ಮುಂಬರುವ ಸವಾಲುಗಳನ್ನು ಎದುರಿಸಲು ಇಂದಿನ ಪೀಳಿಗೆ ಸಿದ್ಧಗೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗಣ್ಯರೆಲ್ಲರೂ ಸೇರಿ ಸರ್ದಾರ್ ವಲ್ಲಭಾಯ್ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಜಿಲ್ಲೆಯ ಒಂಬತ್ತು ಮತ್ತು ಹತ್ತನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಆಸಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ “ಕಲಿಕಾ ಆಸರೆ” ಪುಸ್ತಕ ಲೋಕಾರ್ಪಣೆಗೊಳಿಸಲಾಯಿತು.
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ 371(ಜೆ) ಕುರಿತು ಶಾಲಾ ಕಾಲೇಜುಗಳಲ್ಲಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆ ಮತ್ತು ಚಿತ್ರಕಲೆ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.
ಬಳ್ಳಾರಿ ಮಹಾನಗರ ಪಾಲಿಕೆ ವತಿಯಿಂದ ವಿವಿಧ ಥೀಮ್ಗಳುಳ್ಳ ಚಿತ್ರಪ್ರದರ್ಶನ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪೌರ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿದ್ದು ಕಾರ್ಯಕ್ರಮದ ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಡಾ.ಬಾಬು ಜಗ ಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್, ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರಾದ ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾ ರಾಣಿ ವಿ.ಜೆ, ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝಬೇರ್.ಎನ್ ಸೇರಿದಂತೆ ಮಹಾನಗರ ಪಾಲಿಕೆಯ ಸದಸ್ಯರು, ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಶಾಲಾ-ಕಾಲೇಜು ಉಪನ್ಯಾಸಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.


