ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಸಭೆ

WhatsApp Group Join Now

ಬೆಳಗಾವಿ ನಗರದ ಪ್ರವಾಸಿಮಂದಿರದಲ್ಲಿ ಮಂಗಳವಾರ ಜರುಗಿದ ಶತಮಾನೋತ್ಸವ ಸಮಿತಿಯ ಸಭೆಯ ಅಧ್ಯಕ್ಷತೆಯನ್ನು ಶತಮಾನೋತ್ಸವ ಸಮಿತಿಯ ಅಧ್ಯಕ್ಷರೂ ಆಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ ವಹಿಸಿ ಅವರು ಮಾತನಾಡಿದರು.

ಶತಮಾನೋತ್ಸವ ಆಚರಣೆ ಬರೀ ಬೆಳಗಾವಿ ಕೇಂದ್ರೀಕೃತವಾಗಿರುವುದಿಲ್ಲ; ಪ್ರತಿಯೊಂದು ಕಾರ್ಯಕ್ರಮವು ಇಡೀ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುವುದು.

ಅಧಿವೇಶನ ಹಾಗೂ ಗಾಂಧೀಜಿಯವರ ಜೀವನ ಸಾಧನೆ ಕುರಿತು ದೊಡ್ಡ ಪ್ರಮಾಣದಲ್ಲಿ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಗುವುದು.

ಎಲ್ಲ ವಿವಿದ ಜಿಲ್ಲೆಗಳಲ್ಲಿ ಗಾಂಧಿ ಅಧ್ಯಯನ ಕೇಂದ್ರ ಆರಂಭಿಸಬೇಕಿದೆ ಎಂದು ಪ್ರತಿಪಾದಿಸಿದ ಅವರು, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಗಾಂಧಿ ಭವನ ಪೂರ್ಣಗೊಳಿಸಬೇಕಿದೆ ಎಂದರು.

ಅರ್ಥಪೂರ್ಣ, ರಚನಾತ್ಮಕ ಕಾರ್ಯಕ್ರಮ ಆಯೋಜಿಸಲು ಗಾಂಧೀವಾದಿಗಳು, ಹಿರಿಯರ ಜತೆ ಚರ್ಚಿಸಿ ಅಧಿವೇಶನದ ಇತಿಹಾಸ ಮರುಸೃಷ್ಟಿ ಮತ್ತು ಮೆಲುಕು ಹಾಕಲು ಶತಮಾನೋತ್ಸವ ಆಚರಣೆ ಮಾಡಲಾಗುವುದು ಎಂದು ಹೇಳಿದರು.

ಅಕ್ಟೋಬರ್ 2 ರಿಂದ ಒಂದು ವರ್ಷಗಳ ಕಾಲ ಶತಮಾನೋತ್ಸವ ವರ್ಷಾಚರಣೆ. ಅಂತರರಾಷ್ಟೀಯ ಮಹತ್ವ ಪಡೆಯಲು ವಿಧಾನಮಂಡಳ ಜಂಟಿ ಅಧಿವೇಶನ ನಡೆಸಲು ಹಾಗೂ ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಕರೆಸಲು ಉದ್ಧೇಶಿಸಲಾಗಿದೆ.

ಬೆಳಗಾವಿ ಅಧಿವೇಶನ ಕುರಿತು ಸ್ಥಳೀಯ ನಾಟಕಕಾರರು ಒಂದು ವಿಶೇಷ ನಾಟಕವನ್ನು ರಚಿಸುವಂತೆ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಹಾಗೂ ಶತಮಾನೋತ್ಸವ ಸಮಿತಿಯ ಗೌರವ ಅಧ್ಯಕ್ಷರಾದ ವೀರಪ್ಪ ಮೊಯ್ಲಿ ಅವರು ಮಾತನಾಡಿ ಶತಮಾನೋತ್ಸವ ಸ್ಮರಣೀಯವಾಗಿಸಲು ಶತಮಾನೋತ್ಸವ ಉದ್ಯಾನ ಮತ್ತು ಭವನ‌ ನಿರ್ಮಾಣ ಮಾಡಬೇಕಿದೆ ಎಂದು ಹೇಳಿದರು

ಇದಲ್ಲದೇ ಮಹಾತ್ಮಾ ಗಾಂಧಿ ಪುತ್ಥಳಿ ನಿರ್ಮಾಣ; ಅಧಿವೇಶನ ಸ್ಥಳದಲ್ಲಿ ಗಾಂಧಿ ಸ್ಮಾರಕ; ಛಾಯಾಚಿತ್ರ ಹಾಗೂ ವಸ್ತುಪ್ರದರ್ಶನ ಹಾಗೂ ಖಾಯಂ ಮ್ಯೂಸಿಯಂ ಸ್ಥಾಪಿಸಬೇಕು ಎಂದು ಸಭೆಯಲ್ಲಿ ತಿಳಿಸಿದರು.

ಶತಮಾನೋತ್ಸವ ಅಂಚೆ ಚೀಟಿ ಬಿಡುಗಡೆ; ಬೆಳಗಾವಿಯಲ್ಲಿ ವಿಚಾರಸಂಕಿರಣ ರೂಪುರೇಷೆ ಸಿದ್ಧಪಡಿಸಬೇಕು ಮತ್ತು ಶತಮಾನೋತ್ಸವ ಸಂದರ್ಭದಲ್ಲಿ ವಿವಿಧ ಸಮ್ಮೇಳನ ಹಮ್ಮಿಕೊಳ್ಳಲು ಯೋಜನೆ ರೂಪಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಶತಮಾನೋತ್ಸವ ಸಮಿತಿಯ ಸಂಚಾಲಕರಾದ ವಿಧಾನಪರಿಷತ್ ಮಾಜಿ ಸಭಾಪತಿ ಬಿ.ಎಲ್.ಶಂಕರ ಅವರು, ಅಧಿವೇಶನದ ಶತಮಾನೋತ್ಸವವು ಒಂದು ವರ್ಷದ ಕಾರ್ಯಕ್ರಮ. ಮುಂದಿನ ಅಕ್ಟೋಬರ್ 2 ರವರೆಗಿನವರೆಗೆ ಅಳವಡಿಸಿಕೊಳ್ಳಲಾಗುವುದು ಎಂದು ವಿವರಿಸಿದರು.

ಹಿರಿಯ ಸಾಹಿತಿ ಡಾ.ಸರಜೂ ಕಾಟ್ಕರ್, ದೇಶಪಾಂಡೆ ಸ್ಮಾರಕ ಟ್ರಸ್ಟ್ ಅಧ್ಯಕ್ಷರಾದ ರವೀಂದ್ರ ದೇಶಪಾಂಡೆ, ಪ್ರೊ.ಮರಾಠೆ, ನಿಲೇಶ್ ಬೇನಾಳ ಮತ್ತಿತರರು ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ಬಗ್ಗೆ ಸಲಹೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಬೆಳಗಾವಿ ಉತ್ತರ ಶಾಸಕರಾದ ಆಸಿಫ್ (ರಾಜು) ಸೇಠ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಪಂ ಸಿಇಓ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಸಮಿತಿಯ ಸದಸ್ಯರಾದ ಎನ್.ಆರ್.ವಿಶುಕುಮಾರ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

About The Author