2024ರ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭ

WhatsApp Group Join Now

ಧಾರವಾಡ 2023-24 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ, ಸ್ನಾಕೋತ್ತರ ಪದವಿ ಮತ್ತು ಡಿಪ್ಲೋಮಾ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳು ಯುವನಿಧಿ ಯೋಜನೆಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಅಗತ್ಯ ಮಾಹಿತಿ ನೀಡುವ ಬಿತ್ತಪತ್ರ ಹಾಗೂ ಪ್ರಚಾರ ಸಾಮಗ್ರಿಗಳನ್ನು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪೊಲೀಸ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ ಹಾಗೂ ಇತರರು ಸಾಮಾಗ್ರಿಗಳನ್ನು ಬಿಡುಗಡೆ ಮಾಡಿ ಯುವ ನಿಧಿ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿದರು.

ಯುವ ಜನತೆಯ ಭವಿಷ್ಯಕ್ಕಾಗಿ ಕರ್ನಾಟಕ ಸರ್ಕಾರದ ಈ ಗ್ಯಾರಂಟಿ ಯೋಜನೆಯನ್ನು ಪ್ರಾರಂಭಿಸಿದೆ. ಯುವನಿಧಿ ಯೋಜನೆಯಡಿ ಪದವೀಧರರಿಗೆ ರೂ. 3,000 ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ. 1,500 ನಿರುದ್ಯೋಗ ಭತ್ಯೆಯನ್ನು 2 ವರ್ಷಗಳವರೆಗೆ ನೀಡಲಾಗುವುದು. 2024 ರಲ್ಲಿ ಪದವಿ, ಡಿಪ್ಲೋಮಾ ತೇರ್ಗಡೆಯಾಗಿ 180 ದಿನ ನಿರುದ್ಯೋಗಿಗಳಾದ ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ಅರ್ಹರಿರುತ್ತಾರೆ. ಯೋಜನೆಯ ಫಲಾನುಭವಿಯಾಗಲು ಅಭ್ಯರ್ಥಿಗಳು ಸೇವಾ ಸಿಂಧು ಜಾಲತಾಣ https://sevasindhugs.karnataka.gov.in/ ದಲ್ಲಿ ಅರ್ಜಿ ಸಲ್ಲಿಸಬೇಕು.

ಅರ್ಹ ಫಲಾನುಭವಿಗಳು ನ್ಯಾಶನಲ್ ಅಕ್ಯಾಡೆಮಿಕ ಡೆಪೆÇಸೆಟರಿ (NAD Portal) ನ ಜಾಲತಾಣ https://nad.karnataka.gov.in ನಲ್ಲಿ ವಿಶ್ವವಿದ್ಯಾನಿಲಯಗಳು, ಶೈಕ್ಷಣಿಕ ಸಂಸ್ಥೆಗಳು ನೀಡುವ ಪದವಿ, ಡಿಪ್ಲೋಮಾ , ತಾತ್ಕಾಲಿಕ ಪದವಿ ಪ್ರಮಾಣ ಪತ್ರಗಳ ಮೇಲೆ ನಮೂದಿಸಿರುವ ನೋಂದಣಿ ಸಂಖ್ಯೆಯನ್ನು ಬಳಸಿಕೊಂಡು ದತ್ತಾಂಶವು ಲಭ್ಯವಿದೆಯೆ ಅಥವಾ ಇಲ್ಲವೇ ಎಂಬುದರ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು. ಸ್ವಯಂ ಪ್ರೇರಿತವಾಗಿ ನೋಂದಣಿ ಮಾಡತಕ್ಕದ್ದು ಅಥವಾ ತಮ್ಮ ಸಂಬಂಧಿತ ಕಾಲೇಜು, ಬೋರ್ಡ, ವಿಶ್ವ ವಿದ್ಯಾಲಯವನ್ನು ಸಂಪರ್ಕಿಸಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಅಭ್ಯರ್ಥಿಗಳು ಯುವನಿಧಿಯ ನೋಂದಣಿಗಾಗಿ ಹಾಗೂ ಯೋಜನೆಯ ಪ್ರಯೋಜನೆ ಪಡೆಯಲು ಗ್ರಾಮೀಣ ಭಾಗದಲ್ಲಿ ಹತ್ತಿರದ ಗ್ರಾಮ ಒನ್ ಕೇಂದ್ರಗಳು ಹಾಗೂ ನಗರ ಪ್ರದೇಶಗಳಲ್ಲಿ ಕರ್ನಾಟಕ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ತೆರಳಿ ನೋಂದಣಿ ಮಾಡಬಹುದಾಗಿದೆ.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಉಪಪೊಲೀಸ್ ಆಯುಕ್ತ ಮಾನಿಂಗ ನಂದಗಾವಿ, ಮಹಾನಗರಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ರವೀಂದ್ರ ದ್ಯಾಬೇರಿ, ಭೂದಾಖಲೆಗಳ ಇಲಾಖೆ ಉಪನಿರ್ದೇಶಕ ಮೋಹನ ಶಿವಣ್ಣನವರ ಸೇರಿದಂತೆ ಇತರ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

About The Author