ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು.

WhatsApp Group Join Now

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಣುಕು ಪ್ರದರ್ಶನಕ್ಕೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಅಣುಕು ಪ್ರದರ್ಶನಕ್ಕೆ ಸೂಚಿಸಿದ ಸ್ಥಳಗಳಲ್ಲಿ ಆಂತರಿಕ ಭದ್ರತೆ ಕುರಿತು ಪರಿಶೀಲಿಸಬೇಕು. ಅಣುಕು ಪ್ರದರ್ಶನಕ್ಕೆ ಸಮಯ ಅವಧಿ ನಿಗದಿಪಡಿಸಿ, ಸಂಬಂಧಿಸಿದ ಇಲಾಖೆಗಳಾದ ಪೊಲೀಸ್, ಆರೋಗ್ಯ ಇಲಾಖೆ, ಅಗ್ನಿ ಶಾಮಕ ದಳ, ರಸ್ತೆ ಸಾರಿಗೆ ಇಲಾಖೆಯ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ಸರ್ಕಾರದ ಕಾರ್ಯದರ್ಶಿಗಳ ನಿರ್ದೇಶನದಂತೆ ಯುದ್ಧ ಪರಿಸ್ಥಿತಿಯಲ್ಲಿ ಬೆಂಕಿಯ ಅವಘಡಗಳಿಂದ ತಪ್ಪಿಸಿಕೊಳ್ಳುವ ರೀತಿಯ ಸಣ್ಣ ಮಾದರಿಯಲ್ಲಿ ಜನರು ಭಯಭೀತರಾಗದಂತೆ ತುರ್ತು ಪರಿಸ್ಥಿತಿಯ ನಿರ್ವಹಣೆಗೆ ಅಣುಕು ಪ್ರದರ್ಶನ ಏರ್ಪಡಿಸಲಾಗುವುದು ಇದನ್ನು ಅಗ್ನಿ ಶಾಮಕ ದಳದ ಅಧಿಕಾರಿ ನಿರ್ವಹಿಸಬೇಕು ಎಂದು ಸೂಚಿಸಿದರು.

ಚಿಕ್ಕೋಡಿ ವ್ಯಾಪ್ತಿಯ ಕಣಗಲಾ, ಬೆಳಗಾವಿ ನಗರದ ಸುತ್ತಮುತ್ತಲಿನ ಪ್ರದೇಶದಲ್ಲಿ ಆಯೋಜಿಸಬೇಕು. ಆಯಾ ತಹಶೀಲ್ದಾರ್ ಗಳು ಅಣಕು ಪ್ರದರ್ಶನದ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ಅಣಕು ಪ್ರದರ್ಶನ ಸಂದರ್ಭದಲ್ಲಿ ಅಗತ್ಯ ಪರಿಕರಗಳನ್ನು ಧರಿಸಿರಬೇಕು. ಆರೋಗ್ಯ ಇಲಾಖೆಯ ಸಿಬ್ಬಂದಿಗಳನ್ನು ನೇಮಿಸಬೇಕು. ಕೆಂಪು, ಹಳದಿ, ಹಸಿರು ಮತ್ತು ಕಪ್ಪು ವಲಯಗಳನ್ನು ಗುರುತಿಸಬೇಕು. ಆಯಾ ವಲಯಗಳ ಮೂಲಕ ಗಾಯಗೊಂಡವರನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಲು ಮುಂದಾಗಬೇಕು ಎಂದು ಅಣಕು ಪ್ರದರ್ಶನದ ಕುರಿತು ಮಾಹಿತಿ ನೀಡಿದರು.

ಅಣಕು ಪ್ರದರ್ಶನಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು ಬಳಸಿಕೊಳ್ಳಬೇಕು ಮತ್ತು ಮೋಕ್ ಡ್ರಿಲ್ ಕುರಿತು ಮುಂಚಿತವಾಗಿಯೇ ಮಾಹಿತಿ ನೀಡಬೇಕು. ಸೈರನ್ ಬಳಕೆ ಕಡ್ಡಾಯವಾಗಿ ಮಾಡಬೇಕು ಒಂದು ವೇಳೆ ವಸತಿ ಪ್ರದೇಶಗಳಿದ್ದಲ್ಲಿ ಅಣಕು ಪ್ರದರ್ಶನದ ಕುರಿತು ಸ್ಥಳೀಯರಿಗೆ ಮಾಹಿತಿ ನೀಡಬೇಕು.

ಜಿಲ್ಲೆಯಲ್ಲಿ ಈಗಾಗಲೇ ಎದುರಾಗಿರುವ ವಿಪತ್ತು ನಿರ್ವಹಣೆ ಸಂದರ್ಭದಲ್ಲಿ ಎಲ್ಲ ಅಧಿಕಾರಿಗಳು ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸಿದ್ದಾರೆ. ಅದೇ ರೀತಿಯಲ್ಲಿ ಮುಂದಿನ ದಿನಗಳಲ್ಲಿ ವಿಪತ್ತು ನಿರ್ವಹಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಬಿ ಬಸರಗಿ, ಮಹಾನಗರ ಪಾಲಿಕೆ ಆಯುಕ್ತರಾದ ಶುಭ.ಬಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ್ ಕಲಾದಗಿ, ಪಶು ಸಂಗೋಪನಾ ಇಲಾಖೆ ಉಪ ಡಾ. ರಾಜೀವ್ ಕುಲೇರ, ಎಲ್ಲ ತಾಲೂಕಾ ತಹಶೀಲ್ದಾರಗಳು, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

About The Author