12 August 2026
Advertisement
ರಾಜ್ಯ

ಜಿಲ್ಲಾ ಬಾಲಕಾರ್ಮಿಕರ ಯೋಜನೆ: ಕಾರ್ಯಕಾರಿ ಸಮಿತಿ ಸಭೆ

WhatsApp Group Join Now

ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಜರಗಿದ ಜಿಲ್ಲಾ ಬಾಲ ಕಾರ್ಮಿಕರ ಯೋಜನಾ ಸಂಸ್ಥೆಯ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ವಹಿಸಿ ಅವರು ಮಾತನಾಡಿದರು.

ಕಳೆದ ಮೂರು ವರ್ಷಗಳಿಂದ ಮಕ್ಕಳ ರಕ್ಷಣಾ ಸಹಾಯವಾಣಿಗೆ ಕಡಿಮೆ ಕರೆಗಳು ಬರುತ್ತಿದ್ದು, ಲೋಪದೋಷಗಳನ್ನು ಪರಿಶೀಲಿಸಿ ಕರೆ ಬಾರದಿರುವುದಕ್ಕೆ ಸೂಕ್ತ ಕಾರಣಗಳನ್ನು ಗುರುತಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.

ಬಾಲಕಾರ್ಮಿಕರ ಮುಕ್ತ ಜಿಲ್ಲೆ ಘೋಷಣೆಗೆ ಎಲ್ಲ ಸಂಬಂಧಿಸಿದ ಅಧಿಕಾರಿಗಳು ಜಂಟಿ ಸಮೀಕ್ಷೆಯಲ್ಲಿ ಭಾಗಿಯಾಗಿ ರಕ್ಷಣೆ ಮುಂದಾಗಬೇಕು. ಬಾಲಕಾರ್ಮಿಕರ ರಕ್ಷಣೆಗೆ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಸಹಾಯವಾಣಿಗೆ ಕರೆ ಮಾಡಿ ದೂರು ದಾಖಲಿಸುವಂತೆ ಜಾಗೃತಿ ಅಭಿಯಾನ ಹಮ್ಮಿಕೊಳ್ಳಬೇಕು.

ಪ್ರತಿ ಶಾಲಾ-ಕಾಲೇಜುಗಳಲ್ಲಿ, ರಸ್ತೆ ಬದಿಯಲ್ಲಿ ಗೋಡೆ ಬರಹ, ಹಾಗೂ ಜಾಗೃತಿ ಕಾರ್ಯಕ್ರಮಗಳ ಆಯೋಜನೆ ಮೂಲಕ ಹೆಚ್ಚಿನ ಮಟ್ಟದಲ್ಲಿ ಪ್ರಚಾರ ಕೈಗೊಂಡು ಮಕ್ಕಳ ರಕ್ಷಣೆಗೆ ಮುಂದಾಗಬೇಕು.

ಭಿಕ್ಷಾಟನೆಯಲ್ಲಿ ತೊಡಗಿಕೊಳ್ಳುವ ಮಕ್ಕಳನ್ನು ರಕ್ಷಿಸಿ, ಮಕ್ಕಳನ್ನು ಭಿಕ್ಷಾಟನೆಯಲ್ಲಿ ಬಳಸಿಕೊಳ್ಳುವರನ್ನು ಗುರುತಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಕೆಲವು ತಾಲೂಕು ಭಾಗದಲ್ಲಿ ಬಾಲ್ಯವಿವಾಹಗಳು ನಡೆಯುವ ಸಾಧ್ಯತೆ ಇರುವುದರಿಂದ ಅಂತಹ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ತಿಳಿಸಿದರು.

ಮಕ್ಕಳ ರಕ್ಷಣೆಗೆ ನಿರಂತರ ತಪಾಸಣೆಗಳು ಹೆಚ್ಚಾಗಬೇಕು.
ರಕ್ಷಣೆಗೊಂಡ ಪೋಷಕರಿಲ್ಲದ ಬಾಲಕಾರ್ಮಿಕರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬಾಲ ಮಂದಿರದಲ್ಲಿ ಇರಿಸಲು ಅವಕಾಶ ಕಲ್ಪಿಸಲಾಗುವುದು. ಅದೇ ರೀತಿಯಲ್ಲಿ ದತ್ತು ಸ್ವೀಕಾರ ಕೇಂದ್ರಗಳಲ್ಲಿ ಇರಿಸಿಲು ಅವಕಾಶವಿದ್ದು, ಅಂತಹ ಮಕ್ಕಳ ರಕ್ಷಣೆಗೆ ಅಧಿಕಾರಿಗಳು ನಿರ್ಲಕ್ಷ್ಯ ತೋರಬಾರದು ಎಂದರು.

ಎಸ್.ಸಿ-ಎಸ್.ಟಿ ಸಮುದಾಯದ ರಕ್ಷಣೆಗೊಂಡ ಬಾಲಕಾರ್ಮಿಕರನ್ನು ಮೀಸಲಾತಿ ಅನ್ವಯ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ವಸತಿ ನಿಲಯಗಳಿಗೆ ಪ್ರವೇಶ ನೀಡುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.

ಸಹಾಯಕ ಕಾರ್ಮಿಕ ಆಯುಕ್ತ ದೇವರಾಜ ಮಾತನಾಡಿ,
ಜಿಲ್ಲೆಯಲ್ಲಿ ಬಾಲಕಾರ್ಮಿಕರನ್ನು ರಕ್ಷಿಸಿ, ಪ್ರಕರಣಗಳನ್ನು ದಾಖಲಾಗಿದ್ದು, ರಕ್ಷಿಸಿದ ಮಕ್ಕಳನ್ನು ಪಾಲಕರಿಗೆ ಹಸ್ತಾಂತರಿಸಲಾಗುತ್ತಿದೆ.

ಈಗಾಗಲೇ ಕಿಶೋರ ಕಾರ್ಮಿಕರನ್ನು ರಕ್ಷಿಸಿ ಅಧಿಕ ಪ್ರಕರಣಗಳು ದಾಖಲಿಸಲಾಗುತ್ತಿದೆ. ಕಡ್ಡಾಯ ಶಿಕ್ಷಣ ನೀತಿ ಜಾರಿಯಲ್ಲಿರುವುದರಿಂದ ಬಾಲಕಾರ್ಮಿಕರ ಪ್ರಕರಣಗಳು ಅಷ್ಟು ಹೆಚ್ಚಾಗಿ ಕಂಡು ಬಂದಿರುವುದಿಲ್ಲ ಎಂದು ಹೇಳಿದರು.

ಜಿಲ್ಲಾ ಬಾಲಕಾರ್ಮಿಕರ ಯೋಜನೆಯ ಯೋಜನಾಧಿಕಾರಿ ಜ್ಯೋತಿ ಕಾಂತೆ ಮಾತನಾಡಿ, ರಾಮದುರ್ಗ ತಾಲೂಕಿನ ವ್ಯಾಪ್ತಿಯಲ್ಲಿ ಇಬ್ಬರು ಕಿಶೋರ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದ್ದು, ಪ್ರಕರಣಗಳು ನ್ಯಾಯಾಲಯ ಹಂತದಲ್ಲಿವೆ ಎಂದು ವಿವರಿಸಿದರು.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಈಶ್ವರ ಗಡಾದಿ, ಜಿಲ್ಲಾ ಕಾರ್ಖಾನೆಗಳ ಉಪ ನಿರ್ದೇಶಕ ವೆಂಕಟೇಶ ರಾಠೋಡ, ಕಾರ್ಮಿಕ ನಿರೀಕ್ಷಕರಾದ ಮಲ್ಲಿಕಾರ್ಜುನ್ ಜೋಗುರ, ರಮೇಶ ಕೇಸರೂರ, ಸಂಜು ಭೋಸಲೆ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

About The Author