ಬಾಗಲಕೋಟೆ ಜಿಲ್ಲೆ ಲೋಕಾಪುರ ಪಟ್ಟಣದ ಪ್ರಮುಖ ಕೇಂದ್ರವಾದ ಬಸವೇಶ್ವರ ವೃತ್ತದ ಬಳಿ ಇಂದು ಮುಂಜಾನೆಯೇ ಜೆಸಿಬಿ ಘರ್ಜಿಸಿದೆ. ಮುಧೋಳ ತಹಶೀಲ್ದಾರ್ ಅವರ ಕಡಕ್ ಸೂಚನೆ ಮೇರೆಗೆ ಕಾರ್ಯಾಚರಣೆಗೆ ಇಳಿದ ಮುಧೋಳ ಇಒ ಹಾಗೂ ಪಟ್ಟಣ ಪಂಚಾಯತಿ ಅಧಿಕಾರಿಗಳ ತಂಡ, ರಸ್ತೆ ಬದಿಯಲ್ಲಿದ್ದ ಒತ್ತುವರಿ ಅಂಗಡಿ ಮುಗ್ಗಟ್ಟುಗಳನ್ನು ತೆರವುಗೊಳಿಸಿದೆ.
ದೀರ್ಘಕಾಲದಿಂದ ಪಾದಚಾರಿಗಳ ಮತ್ತು ವಾಹನಗಳ ಮುಕ್ತ ಸಂಚಾರಕ್ಕೆ ಅಡ್ಡಿಯುಂಟುಮಾಡುತ್ತಿದ್ದ ಅಂಗಡಿಗಳನ್ನು ನೆಲಸಮಗೊಳಿಸುವ ಮೂಲಕ ರಸ್ತೆ ಸುಗಮಗೊಳಿಸಲು ಅಧಿಕಾರಿಗಳು ಮುಂದಾಗಿದ್ದಾರೆ.
ಇನ್ನು ಯಾವುದೇ ಮುನ್ಸೂಚನೆ ಇಲ್ಲದೆ ಏಕಾಏಕಿ ಅಂಗಡಿಗಳನ್ನು ತೆರವುಗೊಳಿಸಿದ್ದರಿಂದ ಬೀದಿ ಬದಿ ವ್ಯಾಪಾರಸ್ಥರು ತೀವ್ರ ಕಂಗಾಲಾಗಿದ್ದಾರೆ. ಕಾರ್ಯಾಚರಣೆ ವೇಳೆ ಅಧಿಕಾರಿಗಳು ಮತ್ತು ವ್ಯಾಪಾರಸ್ಥರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ಟೆಂಡರ್ ಪ್ರಕ್ರಿಯೆಯಲ್ಲಿ ದೊಡ್ಡ ಮಟ್ಟದ ವ್ಯತ್ಯಾಸವಾಗಿದೆ ಎಂದು ಮಹಿಳೆಯೊಬ್ಬರು ಕಣ್ಣೀರು ಹಾಕುತ್ತಾ ತಮ್ಮ ಅಳಲು ತೋಡಿಕೊಂಡಿದ್ದಾರೆ. ಸೂಕ್ತ ವ್ಯಾಪಾರಕ್ಕೆ ಪರ್ಯಾಯ ಜಾಗದ ವ್ಯವಸ್ಥೆ ಮಾಡಿಕೊಡುವಂತೆ ಆಗ್ರಹಿಸಿರುವ ನೊಂದ ವ್ಯಾಪಾರಿಗಳು, ಅಧಿಕಾರಿಗಳ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.



