ಬಳ್ಳಾರಿ ಮಾದಕ ಮುಕ್ತ ಹಾಗೂ ಆರೋಗ್ಯವಂತ ಸಮಾಜದ ನಿರ್ಮಾಣ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನೆ ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ‘ನಶಾ ಮುಕ್ತ ಭಾರತ ಅಭಿಯಾನ’ ದ ಅಂಗವಾಗಿ ಬಳ್ಳಾರಿ ಜಿಲ್ಲಾ ಪೊಲೀಸ್ ಹಾಗೂ ಬಳ್ಳಾರಿ ಜಿಲ್ಲಾ ನರ್ಸಿಂಗ್ ಅಸೋಸಿಯೇಷನ್ ಜಂಟಿಯಾಗಿ ನಗರದ ಬಿಎಂಸಿಆರ್ಸಿ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇಂದಿನ ದಿನಗಳಲ್ಲಿ ದೇಶದ ಯುವಶಕ್ತಿಯು ಮಾದಕ ವ್ಯಸನಗಳ ಜಾಲಕ್ಕೆ ಸಿಲುಕಿ ತತ್ತರಿಸುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವಜನತೆಯನ್ನು ಈ ಮಾರಕ ಜಾಲದಿಂದ ರಕ್ಷಿಸುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಪ್ರತಿಪಾದಿಸಿದರು.
ಯುವಶಕ್ತಿ ದೇಶದ ಬೆನ್ನೆಲುಬು. ಅವರು ದಾರಿ ತಪ್ಪದಂತೆ ನೋಡುವುದು ಮತ್ತು ಮಾದಕ ದ್ರವ್ಯಗಳ ಮುಕ್ತ ಸಮಾಜವನ್ನು ನಿರ್ಮಿಸುವುದು ಕೇವಲ ಕಾನೂನು ಸಂಸ್ಥೆಗಳ ಕೆಲಸವಲ್ಲ, ಅದು ಇಡೀ ಸಮಾಜದ ಹೊಣೆಯಾಗಿದೆ ಎಂದು ಅವರು ಕರೆ ನೀಡಿದರು.
ಸಮಾಜದಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವ್ಯಾಪಕ ಜಾಗೃತಿ ಮೂಡಿಸುವ ಅಗತ್ಯವಿದ್ದು, ಪ್ರತಿಯೊಬ್ಬರೂ ಈ ನಿಟ್ಟಿನಲ್ಲಿ ಕೈಜೋಡಿಸಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ಅವರು ಮಾತನಾಡಿ, ವ್ಯಸನ ಮುಕ್ತ ಭಾರತವನ್ನು ಕಟ್ಟಲು ಪ್ರತಿಯೊಬ್ಬ ನಾಗರಿಕರು ಕೈಜೋಡಿಸಬೇಕು ಮತ್ತು ಯಾವುದೇ ರೀತಿಯ ಅಕ್ರಮ ಮಾದಕ ದ್ರವ್ಯಗಳ ಜಾಲ ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಕರೆ ನೀಡಿದರು.
ಮಾದಕ ದ್ರವ್ಯಗಳ ಹಾವಳಿ ಸಮಾಜವನ್ನು ಮತ್ತು ಯುವ ಪೀಳಿಗೆಯನ್ನು ತಪ್ಪು ದಾರಿಗೆ ಎಳೆಯುತ್ತಿದೆ. ಈ ಪಿಡುಗನ್ನು ಬುಡಸಮೇತ ಕಿತ್ತೆಸೆಯಲು ಕೇವಲ ಪೊಲೀಸ್ ಇಲಾಖೆಯ ಶ್ರಮ ಮಾತ್ರ ಸಾಲದು, ಸಾರ್ವಜನಿಕರ ಸಹಭಾಗಿತ್ವವೂ ಅತ್ಯಂತ ಅಗತ್ಯವಾಗಿದೆ ಎಂದರು.
ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನವರಲ್ಲಿ ಜಾಗೃತಿ ಮೂಡಿಸಬೇಕು. ಜಿಲ್ಲೆಯಲ್ಲಿ ಎಲ್ಲೇ ಆದರೂ ಅಕ್ರಮ ಗಾಂಜಾ, ಡ್ರಗ್ಸ್ ಮಾರಾಟ ಅಥವಾ ಸಾಗಾಟ ಕಂಡುಬಂದಲ್ಲಿ ನಾಗರಿಕರು ನಿರ್ಭೀತಿಯಿಂದ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬಹುದು ಎಂದರು.
ಮಾಹಿತಿ ನೀಡುವ ಸಾರ್ವಜನಿಕರ ಹೆಸರನ್ನು ಯಾವುದೇ ಕಾರಣಕ್ಕೂ ಬಹಿರಂಗಪಡಿಸದೆ, ಗೌಪ್ಯವಾಗಿಡಲಾಗುವುದು ಎಂದು ಅವರು ಭರವಸೆ ನೀಡಿದ ಅವರು, ಯುವಜನತೆ ಇಂತಹ ದುಶ್ಚಟಗಳಿಗೆ ಬಲಿಯಾಗದಂತೆ ಪೋಷಕರು ಸಹ ತಮ್ಮ ಮಕ್ಕಳ ದಿನನಿತ್ಯದ ಚಟುವಟಿಕೆಗಳ ಮೇಲೆ ನಿಗಾ ಇಡಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ ಮಾದಕ ವಸ್ತುಗಳಿಂದ ದೂರವಿರುತ್ತೇನೆ ಎಂಬ ಪ್ರತಿಜ್ಞಾ ವಿಧಿಯನ್ನು ಸ್ವೀಕಾರ ಮಾಡಲಾಯಿತು.
ಜಾಗೃತಿ ಜಾಥಾಕ್ಕೆ ಚಾಲನೆ:
ಅಂತರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಾಟ ವಿರೋಧಿ ದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಗಣ್ಯರು ಚಾಲನೆ ನೀಡಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಅಬಕಾರಿ ಇಲಾಖೆಯ ಉಪ ಆಯುಕ್ತ ಮಂಜುನಾಥ, ಬಳ್ಳಾರಿ ನಗರ ಡಿವೈಎಸ್ಪಿ ಗೋವಿಂದರಾಜು, ಜಿಲ್ಲಾ ನರ್ಸಿಂಗ್ ಅಸೋಸಿಯೇಷನ್ ಪದಾಧಿಕಾರಿಗಳು ಸೇರಿದಂತೆ ಜಾಥಾದಲ್ಲಿ ನರ್ಸಿಂಗ್ ಕಾಲೇಜಿನ ನೂರಾರು ವಿದ್ಯಾರ್ಥಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಸಾರ್ವಜನಿಕರು ಭಾಗವಹಿಸಿದ್ದರು.
ಜಾಥಾವು ಬಿಎಂಸಿಆರ್ಸಿ ಮೈದಾನದಿಂದ ಆರಂಭಗೊಂಡು ಸುಧಾ ಕ್ರಾಸ್ ವೃತ್ತ, ಇನ್ಫ್ಯಾಂಟರಿ ರಸ್ತೆ, ಎಸ್ಪಿ ವೃತ್ತ, ಕನಕ ದುರ್ಗಮ್ಮ ದೇವಸ್ಥಾನದ ವೃತ್ತದ ಮೂಲಕ ಎಸ್ಪಿ ಕಚೇರಿ ಆವರಣಕ್ಕೆ ತಲುಪಿ ಅಂತ್ಯಗೊಂಡಿತು.
ವಿದ್ಯಾರ್ಥಿಗಳು ಮಾದಕ ದ್ರವ್ಯಗಳ ದುಷ್ಪರಿಣಾಮಗಳನ್ನು ಬಿಂಬಿಸುವ ವಿವಿಧ ಫಲಕಗಳನ್ನು ಹಿಡಿದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ವಿಶೇಷವಾಗಿ, ಧೂಮಪಾನ ಮತ್ತು ಮಾದಕ ದ್ರವ್ಯಗಳು ಮನುಷ್ಯನ ಜೀವಕ್ಕೆ ಹೇಗೆ ಕಂಟಕವಾಗುತ್ತವೆ ಎಂಬುದನ್ನು ತೋರಿಸುವ ‘ಡ್ರಗ್ಸ್ ಜೀವವನ್ನು ನಾಶಪಡಿಸುತ್ತವೆ’ಎಂಬ ಸಂದೇಶವುಳ್ಳ ತಲೆಬುರುಡೆಯ ಆಕೃತಿಯು ಎಲ್ಲರ ಗಮನ ಸೆಳೆಯಿತು.



