ರಾಮದುರ್ಗ ತಾಲೂಕಿನಲ್ಲಿ ಉಂಟಾಗಿರುವ ಭೀಕರ ಬರಗಾಲದಿಂದ ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ಸರ್ಕಾರದ ನೆರವು ನೀಡುವದು ಹಾಗೂ ಬರಗಾಲ ಘೋಷಣೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಶಾಸಕ ಅಶೋಕ ಪಟ್ಟಣ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ರಾಮದುರ್ಗ ತಾಲೂಕಿನಲ್ಲಿ ಈ ವರ್ಷ ಮಳೆ ಕೊರತೆಯಿಂದಾಗಿ ಭೀಕರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ತಮ್ಮ ಜಮೀನುಗಳಲ್ಲಿ ಬೀಜ, ಗೊಬ್ಬರ ಹಾಗೂ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಹಣ ಖರ್ಚು ಮಾಡಿ ಬೆಳೆ ಬೆಳೆದಿದ್ದರೂ, ಸಮರ್ಪಕ ಮಳೆಯಾಗದೆ ಬೆಳೆಗಳು
ಒಣಗಿ ಹೋಗಿವೆ. ಈಗಾಗಲೇ ರೈತರು ಸಾಲ ಮಾಡಿ ಬೀಜ, ಗೊಬ್ಬರ ಹಾಗೂ ಇತರ ಕೃಷಿ ಸಾಮಗ್ರಿಗಳನ್ನು ಖರೀದಿಸಿದ್ದಾರೆ. ಇದೀಗ ಮಳೆ ಕೊರತೆಯಿಂದ ಬೆಳೆ ನಷ್ಟವಾಗುತ್ತಿರುವುದರಿಂದ ರೈತರು ಆರ್ಥಿಕವಾಗಿ ಕಂಗಾಲಾಗಿದ್ದಾರೆ.
ಕುಟುಂಬ ನಿರ್ವಹಣೆ ಹಾಗೂ ಕೃಷಿ ಸಾಲಗಳನ್ನು ತೀರಿಸುವುದು ರೈತರಿಗೆ ದೊಡ್ಡ ಸಮಸ್ಯೆಯಾಗಿದೆ.
ಆದ್ದರಿಂದ ಸರ್ಕಾರ ರಾಮದುರ್ಗ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಪರಿಗಣಿಸಿ, ಬೆಳೆ ನಷ್ಟದ ಸಮೀಕ್ಷೆಯನ್ನು ತಕ್ಷಣ ನಡೆಸಿ,
ಅರ್ಹ ರೈತರಿಗೆ ಬೆಳೆ ಪರಿಹಾರ ನೀಡಬೇಕು. ರೈತರಿಗೆ ಅಗತ್ಯವಿರುವ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಮತ್ತು ನೀರಿನ ವ್ಯವಸ್ಥೆ ಮಾಡಬೇಕು. ಕೃಷಿ ಸಾಲಗಳ ಬಗ್ಗೆ ಸೂಕ್ತ ಪರಿಹಾರ ಕ್ರಮ ‘ಕೈಗೊಂಡು ರೈತರ ನೆರವಿಗೆ ಸರ್ಕಾರ ತಕ್ಷಣ ಧಾವಿಸಬೇಕು ಎಂದು ಆಗ್ರಹಿಸಿದರು.
ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾಧ್ಯಕ್ಷ ಸುರೇಶ ‘ಗುಂಜೇರಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮದುರ್ಗ, ಪದಾಧಿಕಾರಿಗಳಾದ ಮಹಾದೇವ ತ್ಯಾವಟಗಿ, ಈರಣ್ಣ ರಾಜನಾಳ, ಬಸು ಯಾದವಾಡ, ದ್ಯಾಮಣ್ಣ ಪೊತೆನ್ನವರ, ಗಿರಿಯಪ್ಪ ಹಂಜಿ, ನಿಂಗಪ್ಪ ಜೋಗಿ, ನಾಗವ್ವ ಮಾಯನ್ನವರ ಸೇರಿದಂತೆ ಇತರರು ಪಾಲ್ಗೊಂಡಿದ್ದರು



