ಭರೂಚ್ ನಗರದ ಬಳಿಯ ಹೆದ್ದಾರಿಯಲ್ಲಿ ರಸ್ತೆಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಯಾತ್ರಿಗಳ ಮೇಲೆ ಹರಿದ ಲಾರಿ

WhatsApp Group Join Now

ಅತ್ಯಾಚಾರ ಆರೋಪದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ಮಾಡಬೇಕು ಮತ್ತು ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ಆಗಬೇಕು ಎಂದು ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿಗೆ ಭೇಟಿಯಾಗಿ ಮನವಿ ನೀಡಲು ಮಂಗಳೂರಿನಿಂದ ದೆಹಲಿಗೆ ಐದು ಜನರ ತಂಡ ಪಾದಯಾತ್ರೆ ಹೊರಟಿತ್ತು. ಇಂದು 55ನೆಯ ದಿನ ಪಾದಯಾತ್ರೆಯು ಗುಜರಾತಿನ ಭರೂಚ್ ಎನ್ನುವ ನಗರ ತಲುಪಿತ್ತು.

ಈ ಪಾದಯಾತ್ರೆಯಲ್ಲಿದ್ದವರಿಗೆ ನೈತಿಕ ಬೆಂಬಲ ನೀಡಲು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡರೂ ಸಹ ನೆನ್ನೆ ಮತ್ತು ಇಂದು ಈ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಭರೂಚ್ ನಗರದ ಬಳಿಯ ಹೆದ್ದಾರಿಯಲ್ಲಿ ಲಾರಿಯೊಂದು ರಸ್ತೆಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಯಾತ್ರಿಗಳ ಮೇಲೆ ಹರಿದು, KRS ಪಕ್ಷದ ಕಾರ್ಯಾಧ್ಯಕ್ಷ ಎಸ್.ಎಚ್.ಲಿಂಗೇಗೌಡ ಮತ್ತು ಮಂಗಳೂರಿನ ಕುಂಜಿ ಮೂಸಾ ಮೃತಪಟ್ಟಿದ್ದಾರೆ.

ಮಹಿಳೆಯೊಬ್ಬರೂ ಸೇರಿದಂತೆ ನಾಲ್ಕು ಜನರಿಗೆ ತೀವ್ರ ಗಾಯಗಳಾಗಿವೆ. ಅವರು ಭರೂಚ್ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕಾನೂನು ಪ್ರಕ್ರಿಯೆಗಳನ್ನು ಶೀಘ್ರ ಮುಗಿಸಿ ಮೃತದೇಹಗಳನ್ನು ರಾಜ್ಯಕ್ಕೆ ವಾಪಸು ತರುವ ನಿಟ್ಟಿನಲ್ಲಿ ಕರ್ನಾಟಕ ಮತ್ತು ಗುಜರಾತ್ ಸರ್ಕಾರದ ಅಧಿಕಾರಿಗಳು ಮತ್ತು KRS ಪಕ್ಷದ ಮುಖಂಡರು ಸಂಪರ್ಕದಲ್ಲಿದ್ದು, ಆ ನಿಟ್ಟಿನಲ್ಲಿ ಮುಂದುವರೆದಿದ್ದಾರೆ. ಹೆಚ್ಚಿನ ಮಾಹಿತಿಗಳನ್ನು ತದನಂತರದಲ್ಲಿ ನೀಡಲಾಗುವುದು.

KRS ಪಕ್ಷ ಆರಂಭವಾದಾಗಿನಿಂದಲೂ ಪಕ್ಷದ ಅವಿಭಾಜ್ಯ ಅಂಗ ಮತ್ತು ಅತಿದೊಡ್ಡ ಬಲವಾಗಿದ್ದ ಮತ್ತು ಕಳೆದ ಆರು ವರ್ಷಗಳಿಂದ ಪಕ್ಷದ ಉಪಾಧ್ಯಕ್ಷರಾಗಿ ದುಡಿದು ಇತ್ತೀಚೆಗೆ ತಾನೆ ಕಾರ್ಯಾಧ್ಯಕ್ಷರಾಗಿ ನೇಮಕವಾಗಿದ್ದ ಶ್ರೀ. ಲಿಂಗೇಗೌಡರ ನಿಧನಕ್ಕೆ ಪಕ್ಷ ತೀವ್ರ ದುಃಖ ವ್ಯಕ್ತಪಡಿಸುತ್ತದೆ ಮತ್ತು ಮೃತರ ಕುಟುಂಬಕ್ಕೆ ಸಂತಾಪಗಳನ್ನು ಸಲ್ಲಿಸುತ್ತದೆ. ಈ ಸಂದರ್ಭದಲ್ಲಿ ಇಡೀ ಪಕ್ಷ ಮೃತರ ಕುಟುಂಬದೊಂದಿಗೆ ನಿಲ್ಲಲಿದೆ.

About The Author