ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ವಿಧಾನಮಂಡಳ ಚಳಿಗಾಲ ಅಧಿವೇಶನ-2024 ರ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು.
ಪ್ರಸಕ್ತ ಸಾಲಿನ ವಿಧಾನಮಂಡಳ ಚಳಿಗಾಲ ಅಧಿವೇಶನ ಡಿ.9 ರಿಂದ ನಡೆಯಲಿದೆ. ಅಧಿವೇಶನ ಸಂದರ್ಭದಲ್ಲಿ ಸಮರ್ಪಕ ವಸತಿ, ಸಾರಿಗೆ, ಊಟೋಪಹಾರ ವ್ಯವಸ್ಘೆ ಕಲ್ಪಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.
ಈ ಬಾರಿಯ ಚಳಿಗಾಲದ ಅಧಿವೇಶನ ಸಿದ್ಧತೆಗೆ ಕಡಿಮೆ ಸಮಯಾವಕಾಶವಿದ್ದು, ಅಧಿವೇಶನ ಯಶಸ್ವಿಗಾಗಿ ಅಧಿಕಾರಿಗಳು, ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಹೇಳಿದರು.
ಅಧಿವೇಶನದ ಯಶಸ್ವಿಗಾಗಿ ಈಗಾಗಲೇ ವಸತಿ, ಆಹಾರ, ಸಾರಿಗೆ, ಆರೋಗ್ಯ, ದೂರು ನಿರ್ವಹಣಾ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಎಲ್ಲ ಸಮಿತಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಯಾವುದೇ ಲೋಪದೋಷ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ಅಧಿವೇಶನಕ್ಕೆ ಆಗಮಿಸುವ ಸಚಿವರು, ಹಿರಿಯ ಅಧಿಕಾರಿಗಳು, ಭದ್ರತಾ ಸಿಬ್ಬಂದಿ, ವಾಹನ ಚಾಲಕರರುಗಳಿಗೆ ಸೂಕ್ತ ವಸತಿ, ಊಟ ಹಾಗೂ ಸಾರಿಗೆ ವ್ಯವಸ್ಥೆಯನ್ನು ಒದಗಿಸಬೇಕು.
ಅಧಿವೇಶನಕ್ಕಾಗಿ ಆಗಮಿಸುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ಸಚಿವರುಗಳಿಗೆ ಶಿಷ್ಟಾಚಾರದಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ನಿಗಾವಹಿಸಬೇಕು.
ಅಧಿವೇಶನಕ್ಕೆ ಆಗಮಿಸುವ ಗಣ್ಯರುಗಳಿಗೆ ಸೂಕ್ತ ವಸತಿ ವ್ಯವಸ್ಥೆ ಒದಗಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ವಸತಿಗಾಗಿ ಗುರುತಿಸಲಾದ ಹೊಟೇಲ್ ಗಳನ್ನು ಪರಿಶೀಲಿಸಿ, ಅವುಗಳ ಮಾಲಿಕರೊಂದಿಗೆ ಚರ್ಚಿಸಿ ಕೊಠಡಿಗಳನ್ನು ಕಾಯ್ದಿರಿಸಲು ತಿಳಿಸಿದರು.
ಅಧಿವೇಶನದ ಸಂದರ್ಭದಲ್ಲಿ ಸುವರ್ಣ ಸೌಧದಲ್ಲಿ ಅಂತರ್ಜಾಲ ಸಂಪರ್ಕದಲ್ಲಿ ಯಾವುದೇ ಅಡೆತಡೆಗಳು ಆಗದಂತೆ ಅಗತ್ಯ ಕ್ರಮಗಳನ್ನು ಮುಂಚಿತವಾಗಿಯೇ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರೋಷನ್ ತಿಳಿಸಿದರು.
ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ ಅಧಿವೇಶನಕ್ಕೆ ಆಗಮಿಸಿದ ಎಲ್ಲರ ಆರೋಗ್ಯ ರಕ್ಷಣೆ ಹಾಗೂ ತುರ್ತು ವೈದ್ಯಕೀಯ ಸೌಲಭ್ಯ ಕಲ್ಪಿಸಲು ಅನುಕೂಲವಾಗುವಂತೆ ಎಲ್ಲ ವಸತಿ ಸ್ಥಳಗಳಲ್ಲಿ ಮತ್ತು ಸುವರ್ಣ ವಿಧಾನಸೌಧದಲ್ಲಿ ತುರ್ತು ವೈದ್ಯಕೀಯ ತಂಡಗಳನ್ನು ಮತ್ತು ಅಂಬ್ಯುಲೆನ್ಸ್ ಗಳನ್ನು ನಿಯೋಜಿಸಬೇಕು ಎಂದು ಸೂಚನೆ ನೀಡಿದರು.
ಈ ಸಮಯದಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ವಿಶೇಷ ಜಿಲ್ಲಾಧಿಕಾರಿ ಹರ್ಷ ಶೆಟ್ಟಿ, ಪಾಲಿಕೆ ಆಯುಕ್ತೆ ಶುಭಾ, ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾ ನಿರ್ದೇಶಕ ಗಂಗಾಧರ ದಿವಟರ, ಕಾಡಾ ಆಡಳಿತಾಧಿಕಾರಿ ಸತೀಶಕುಮಾರ್, ಲೊಕೋಪಯೋಗಿ ಇಲಾಖೆ ಅಭಿಯಂತರ ಸೊಬರದ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಆಹಾರ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ನಾಯಕ, ಡಿಡಿಪಿಐ ಲೀಲಾವತಿ ಹಿರೇಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು